ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ (TMC) ರಾಷ್ಟ್ರೀಯ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಬಂಧಿತರಾದ ನಿರ್ಮಲ್ ಸೇನ್ಗುಪ್ತಾ, ದೇಬಾಶಿಶ್ ದತ್ತ ಮತ್ತು ಕಾಜಲ್ ದಾಸ್ ಅವರು ಸೋನಾರ್ಪುರದ ದಕ್ಷಿಣದ ಮಾಜಿ ಟಿಎಂಸಿ ಶಾಸಕಿ ಲವ್ಲಿ ಮೈತ್ರಾ ಅವರ ಆಪ್ತರು ಎಂದು ವರದಿಯಾಗಿದೆ.
ಶನಿವಾರದಂದು ಅಭಿಷೇಕ್ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದಿಂದ ಹಾನಿಗೊಳಗಾದ ಕುಟುಂಬಗಳನ್ನು ಭೇಟಿ ಮಾಡಲು ಹೋಗಿದ್ದಾಗ ಈ ಹಲ್ಲೆ ನಡೆದಿತ್ತು. ತಮ್ಮ ಪಕ್ಷದ ಕಾರ್ಯಕರ್ತರನ್ನು ಭೇಟಿಯಾಗಲು ಬೈಕ್ನಲ್ಲಿ ತೆರಳುತ್ತಿದ್ದಾಗ, ಅಲ್ಲಿ ಸೇರಿದ್ದ ಜನರ ಗುಂಪೊಂದು ಟಿಎಂಸಿ ಸಂಸದರನ್ನು ತಡೆದು ಮೊಟ್ಟೆ ಮತ್ತು ಕಲ್ಲುಗಳಿಂದ ಹಲ್ಲೆ ನಡೆಸಿತು. ಈ ಸಂದರ್ಭದಲ್ಲಿ ಹಲವು ಮಹಿಳೆಯರು ಟಿಎಂಸಿ ನಾಯಕನ ವಿರುದ್ಧ "ಕಳ್ಳ ಕಳ್ಳ" ಎಂದು ಘೋಷಣೆ ಕೂಗಿದರು. ಘಟನೆಯ ಸಂಪೂರ್ಣ ದೃಶ್ಯಾವಳಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಈ ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಅಭಿಷೇಕ್ ಬ್ಯಾನರ್ಜಿ, "ಬಿಜೆಪಿಯವರು ನನ್ನನ್ನು ಕೊಲೆ ಮಾಡಲು ಸಂಚು ರೂಪಿಸಿದ್ದಾರೆ" ಎಂದು ಗಂಭೀರ ಆರೋಪ ಮಾಡಿದ್ದಾರೆ. ಘಟನೆ ನಡೆದಾಗ ಪೊಲೀಸರು ಸ್ಥಳದಲ್ಲಿ ಇರಲಿಲ್ಲ. ಇದು ಪೂರ್ವ ಯೋಜಿತ ಕೃತ್ಯವಾಗಿದ್ದು, ನನ್ನ ಮೇಲೆ ಹಲ್ಲೆ ನಡೆಸಲು ಸ್ಥಳೀಯ ಪೊಲೀಸರು ಜನರ ಗುಂಪನ್ನು ಪ್ರಚೋದಿಸಿ ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಘಟನೆಯ ಸಂಪೂರ್ಣ ದೃಶ್ಯಾವಳಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಬಗ್ಗೆ ನ್ಯಾಯಾಲಯದ ಮೊರೆ ಹೋಗುವುದಾಗಿ ಮತ್ತು ಪಶ್ಚಿಮ ಬಂಗಾಳ ರಾಜ್ಯಪಾಲ ಆರ್.ಎನ್. ರವಿ ಅವರಿಗೆ ಮಾಹಿತಿ ನೀಡುವುದಾಗಿ ಬ್ಯಾನರ್ಜಿ ತಿಳಿಸಿದ್ದಾರೆ.
PublicNext
31/05/2026 06:25 pm