ಬೆಂಗಳೂರು: ಕರ್ನಾಟಕದ ನೂತನ ಸರ್ಕಾರದ ರಚನೆಗೆ ವೇಗ ಸಿಕ್ಕಿದ್ದು, ನಿಯೋಜಿತ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯತ್ತ ಮುಖ ಮಾಡಿದ್ದಾರೆ. ಸಚಿವ ಸಂಪುಟ ರಚನೆ, ಖಾತೆ ಹಂಚಿಕೆ ಹಾಗೂ ಸಚಿವ ಸ್ಥಾನಗಳ ಅಂತಿಮ ಪಟ್ಟಿಗೆ ಹೈಕಮಾಂಡ್ ಅಸ್ತು ಪಡೆಯಲು ಇಬ್ಬರು ನಾಯಕರು ಮಹತ್ವದ ಸಭೆ ನಡೆಸಲಿದ್ದಾರೆ.
ರಾಜ್ಯ ರಾಜಕೀಯದಲ್ಲಿ ಇದೀಗ ಸಚಿವ ಸಂಪುಟ ರಚನೆಯ ಕಸರತ್ತು ತೀವ್ರಗೊಂಡಿದೆ. ನಿಯೋಜಿತ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸೋಮವಾರ ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.
ನೂತನ ಸಚಿವ ಸಂಪುಟದಲ್ಲಿ ಯಾರಿಗೆ ಸ್ಥಾನ ಸಿಗಲಿದೆ, ಮೊದಲ ಹಂತದಲ್ಲಿ ಎಷ್ಟು ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಹಾಗೂ ಪ್ರಾದೇಶಿಕ ಮತ್ತು ಜಾತಿ ಸಮೀಕರಣಗಳನ್ನು ಹೇಗೆ ಸಮತೋಲನಗೊಳಿಸಬೇಕು ಎಂಬ ಬಗ್ಗೆ ಚರ್ಚೆ ನಡೆಯಲಿದೆ.
ಸಿಎಲ್ಪಿ ನಾಯಕನಾಗಿ ಆಯ್ಕೆಯಾದ ಬಳಿಕ ಸಚಿವ ಸ್ಥಾನದ ಆಕಾಂಕ್ಷಿಗಳ ಒತ್ತಡ ಹೆಚ್ಚಾಗಿದ್ದು, ಹಲವಾರು ನಾಯಕರು ತಮ್ಮ ಬೆಂಬಲಿಗರ ಮೂಲಕ ಲಾಬಿ ನಡೆಸುತ್ತಿದ್ದಾರೆ. ಇದೇ ಹಿನ್ನೆಲೆಯಲ್ಲಿ ಸಚಿವರ ಅಂತಿಮ ಪಟ್ಟಿಗೆ ಹೈಕಮಾಂಡ್ ಒಪ್ಪಿಗೆ ಪಡೆಯುವುದು ಡಿಕೆ ಶಿವಕುಮಾರ್ ಅವರ ಮೊದಲ ಆದ್ಯತೆಯಾಗಿದೆ.
ಇನ್ನೊಂದೆಡೆ, ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ದೆಹಲಿಗೆ ತೆರಳಲಿದ್ದು, ತಮ್ಮ ಆಪ್ತರು ಮತ್ತು ಹಿರಿಯ ಶಾಸಕರಿಗೆ ಸಚಿವ ಸ್ಥಾನ ನೀಡುವ ಕುರಿತು ಹೈಕಮಾಂಡ್ ನಾಯಕರೊಂದಿಗೆ ಮಾತುಕತೆ ನಡೆಸುವ ಸಾಧ್ಯತೆ ಇದೆ.
ದೆಹಲಿ ಸಭೆಯ ಬಳಿಕವೇ ಕರ್ನಾಟಕದ ನೂತನ ಸಚಿವ ಸಂಪುಟದ ಚಿತ್ರಣ ಬಹುತೇಕ ಸ್ಪಷ್ಟವಾಗಲಿದ್ದು, ರಾಜ್ಯ ರಾಜಕೀಯದ ಕಣ್ಣು ಈಗ ಸಂಪೂರ್ಣವಾಗಿ ಹೈಕಮಾಂಡ್ ನಿರ್ಧಾರದತ್ತ ನೆಟ್ಟಿದೆ.
PublicNext
31/05/2026 09:42 pm