ರಾಮದುರ್ಗ: ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದಲ್ಲಿ ನಿನ್ನೆ ರಾತ್ರಿ ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ನಶೆಯಲ್ಲಿದ್ದ ಯುವಕನಿಂದ 45 ವರ್ಷದ ವ್ಯಕ್ತಿಯ ಬರ್ಬರ ಹತ್ಯೆಯಾಗಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಹುಲಕುಂದ ಗ್ರಾಮದ ಯಮನ್ನಪ್ಪ ಗುಡಾಡೆನ್ನವರ (45) ಅವರನ್ನು ಅದೇ ಗ್ರಾಮದ ಯುವಕ ಪ್ರದೀಪ್ ಪಾತ್ರೊಟ್ (26) ಕಲ್ಲು ಮತ್ತು ಚಾಕುವಿನಿಂದ ಹಲ್ಲೆ ಮಾಡಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಆರೋಪಿ ಪ್ರದೀಪ್ ಘಟನೆ ವೇಳೆ ತೀವ್ರ ನಶೆಯಲ್ಲಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕೊಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ವೈಯಕ್ತಿಕ ದ್ವೇಷವೋ ಅಥವಾ ನಶೆಯ ಅಮಲಿನಲ್ಲಿ ನಡೆದ ಗಲಾಟೆಯೋ ಎಂಬ ಬಗ್ಗೆ ಕಡಕೋಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ರಾತ್ರಿ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಅದು ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಘಟನೆ ಕಡಕೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಆರೋಪಿ ಪ್ರದೀಪ್ ಪಾತ್ರೊಟ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ಮುಂದುವರೆಸಿದ್ದಾರೆ.
ಈ ಭೀಕರ ಕೃತ್ಯದಿಂದ ಹುಲಕುಂದ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಮೃತ ಯಮನ್ನಪ್ಪ ಅವರ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಕಡಕೋಳ ಪೊಲೀಸ್ ಠಾಣಾ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.
Kshetra Samachara
02/06/2026 02:21 pm
LOADING...