ತಿರುವನಂತಪುರಂ: "ಇವನಾರವ ಇವನಾರವ ಇವನಾರವನೆಂದೆನಿಸದಿರಯ್ಯ, ಇವ ನಮ್ಮವ ಇವ ನಮ್ಮವ ಇವ ನಮ್ಮವನೆಂದೆನಿಸಯ್ಯ. ಕೂಡಲಸಂಗಮದೇವ ನಿಮ್ಮ ಮನೆಯ ಮಗನೆಂದೆನಿಸಯ್ಯ..." – ಈ ಬಸವಣ್ಣನ ವಚನವನ್ನು ಕೇರಳ ವಿಧಾನಸಭೆಯಲ್ಲಿ ಮಂಜೇಶ್ವರ ಕ್ಷೇತ್ರದ ಶಾಸಕ ಎ.ಕೆ.ಎಂ. ಅಶ್ರಫ್ ಅವರು ವಾಚನ ಮಾಡುತ್ತಿದ್ದಾಗ, ಸಭೆಯಲ್ಲಿದ್ದ ಉಳಿದ ಸದಸ್ಯರು ಮೇಜು ತಟ್ಟಿ ಶ್ಲಾಘಿಸಿದ್ದಾರೆ.
ಕೇರಳ ವಿಧಾನಸಭಾ ಚುನಾವಣೆಯ ಬಳಿಕ ನಡೆದ ಮೊದಲ ಅಧಿವೇಶನದಲ್ಲಿ ಆಡಳಿತಾರೂಢ ಯುಡಿಎಫ್ ಮೈತ್ರಿಕೂಟದ ಭಾಗವಾಗಿರುವ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ನ ಶಾಸಕ ಎ.ಕೆ.ಎಂ. ಅಶ್ರಫ್ ಅವರು ಕನ್ನಡದಲ್ಲಿ ಬಸವಣ್ಣನ ವಚನ ಹೇಳುವ ಮೂಲಕ ಎಲ್ಲರ ಗಮನ ಸೆಳೆದರು.
ಮಾನವೀಯತೆ, ಸಮಾನತೆ ಮತ್ತು ಸಹೋದರತೆಯ ಸಂದೇಶ ಸಾರುವ ಈ ವಚನದ ಮೂಲಕ ಅವರು ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸುವಂತೆ ಮನವಿ ಮಾಡಿದರು.
ಕೇರಳ ವಿಧಾನಸಭೆಯಲ್ಲಿ ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್ ಅವರು ಕನ್ನಡದಲ್ಲಿ ಬಸವಣ್ಣನ ವಚನ ವಾಚನ ಮಾಡುವ ಮೂಲಕ ಮಾನವೀಯತೆ, ಸಮಾನತೆ ಮತ್ತು ಕ್ಷೇತ್ರದ ಅಭಿವೃದ್ಧಿಗೆ ಅನುದಾನದ ಮನವಿ ಸಲ್ಲಿಸಿ ಎಲ್ಲರ ಗಮನ ಸೆಳೆದರು.
ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅನೇಕ ಕನ್ನಡಿಗರು ಇದಕ್ಕೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರ ಭಾಷಣಕ್ಕೆ ಕೃತಜ್ಞತೆ ಸಲ್ಲಿಸುವ ವೇಳೆ, ಸಾಮಾಜಿಕ ಬದ್ಧತೆ ಮತ್ತು ಎಲ್ಲ ವರ್ಗಗಳ ಒಗ್ಗಟ್ಟಿನ ಕುರಿತು ಮಾತನಾಡುತ್ತಾ ಅಶ್ರಫ್ ಅವರು ಬಸವಣ್ಣನವರ ಪ್ರಸಿದ್ಧ ವಚನ ಸಾಲುಗಳನ್ನು ಉಲ್ಲೇಖಿಸಿದ್ದರು.
ಅದೇ ಅಧಿವೇಶನದಲ್ಲಿ, ಶಾಸಕ ಅಶ್ರಫ್ ಅವರು ಮಂಜೇಶ್ವರ ಮತ್ತು ಕಾಸರಗೋಡು ಜಿಲ್ಲೆಗಳ ಅಭಿವೃದ್ಧಿ ಕುರಿತು ಪ್ರಸ್ತಾಪಿಸಿದರು. ಪ್ರಸ್ತಾಪಿತ ಹೈಸ್ಪೀಡ್ ರೈಲು ಮಾರ್ಗವನ್ನು ಕಾಸರಗೋಡಿಗೆ ವಿಸ್ತರಿಸುವಂತೆ ಒತ್ತಾಯಿಸಿದ ಅವರು, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡುವಂತೆ ಸರ್ಕಾರವನ್ನು ಆಗ್ರಹಿಸಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಜೇಶ್ವರ ಕ್ಷೇತ್ರದಿಂದ ಯುಡಿಎಫ್ ಅಭ್ಯರ್ಥಿಯಾಗಿ ಭರ್ಜರಿ ಗೆಲುವು ಸಾಧಿಸಿದ್ದ ಎ.ಕೆ.ಎಂ. ಅಶ್ರಫ್ ಅವರು, ಆರಂಭದಿಂದಲೂ ತಮ್ಮ ವಿಶಿಷ್ಟ ಶೈಲಿಯ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ.
PublicNext
03/06/2026 05:25 pm