ತುಮಕೂರು : ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಮಾನ್ಯ ಮುಖ್ಯಮಂತ್ರಿಯವರು ನೀಲನಕ್ಷೆ ಇಟ್ಟುಕೊಂಡಿದ್ದು ಅದನ್ನು ಸಾಕಾರಗೊಳಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ. ಉಪ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ತುಮಕೂರು ಜಿಲ್ಲಾ ಪ್ರವಾಸದಲ್ಲಿರುವ ಕಂದಾಯ ಹಾಗೂ ಕ್ರೀಡಾ ಸಚಿವರೂ ಆದ ಅವರು, ಶ್ರೀ ಕ್ಷೇತ್ರ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದರು.
ಲಿಂಗೈಕ್ಯ ಪರಮಪೂಜ್ಯ ಶ್ರೀ ಶಿವಕುಮಾರಸ್ವಾಮೀಜಿಯವರ ಗದ್ದುಗೆಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಅವರು ಮಾಧ್ಯಮದೊಂದಿಗೆ ಮಾತನಾಡಿದರು. ರಾಜ್ಯದ ಅಭಿವೃದ್ಧಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅವರದೇ ಆದ ನೀಲನಕ್ಷೆ ರೂಪಿಸಿದ್ದು ಅದರ ಸಾಕಾರಕ್ಕೆ ಎಲ್ಲರೂ ಕೈಜೋಡಿಸುವುದಾಗಿ ತಿಳಿಸಿದರು.
ವಾಡಿಕೆಯಂತೆ ಶ್ರೀಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದಿರುವುದಾಗಿ ಅವರು ತಿಳಿಸಿದ ಅವರು, ವಿಶೇಷವಾಗಿ ತುಮಕೂರು ಜಿಲ್ಲೆಯಲ್ಲಿ ಅನೇಕ ಜ್ವಲಂತ ಸಮಸ್ಯೆಗಳಿವೆ. ಕುಡಿಯುವ ನೀರಿನ ಸಮಸ್ಯೆ, ನೀರಾವರಿ ಮತ್ತಿತರ ವಿಷಯಗಳ ಬಗ್ಗೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಇರುವ ಸಮಯದಲ್ಲಿ ಬಗೆಹರಿಸಲು ಕ್ರಮ ವಹಿಸಲಾಗುವುದು ಎಂದರು.
ಎತ್ತಿನ ಹೊಳೆ ಯೋಜನೆಯಲ್ಲಿ ಕಳೆ ಫೆಬ್ರುವರಿಗೆ ನೀರು ಬರಬೇಕಿತ್ತು. ಆದರೆ ಭೂ ಸ್ವಾಧೀನ ಮತ್ತಿತರ ವಿಷಯಗಳ ಸಮಸ್ಯೆಯಿದ್ದು ಬಗೆಹರಿಸುವ ಪ್ರಯತ್ನ ಮಾಡಲಾಗುವುದು ಎಂದು ಅವರು ಹೇಳಿದರು.ಕಂದಾಯ ಇಲಾಖೆಯಲ್ಲಿ ಪ್ರತಿ ಸಾಮಾನ್ಯ ವ್ಯಕ್ತಿಗೂ ಭೂಮಿ ಬಹು ಮುಖ್ಯ. ರಾಜ್ಯದಲ್ಲಿ 97 ಲಕ್ಷ ರೈತ ಕುಟುಂಬಗಳಿವೆ. ಅವರೆಲ್ಲ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿವೆ. ಅವರ ಭೂಮಿಯ ಒಡೆತನ ಸಿಗುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ.ಅಶ್ವಿಜ, ಜಿಲ್ಲಾ ಪೊಲೀಸ್ ಅಧೀಕ್ಷಕ ಅಶೋಕ್ ಕೆ.ವಿ. ಮತ್ತಿತರರ ಮುಖಂಡರು ಉಪಸ್ಥಿತರಿದ್ದರು.
Kshetra Samachara
08/06/2026 10:41 am