ಬೆಳ್ತಂಗಡಿ: ತಾಲೂಕಿನ ಬಳ್ಳಮಂಜ–ಪಣಕಜೆ ರಸ್ತೆಯ ಪಾಲ್ಯರ ಎಂಬಲ್ಲಿ ಪಿಕಪ್ ವಾಹನ ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರಿಬ್ಬರು ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ.
ಅಪಘಾತದಲ್ಲಿ ಆಕ್ಟಿವಾ ಸವಾರ ಡಾಕಯ್ಯ ಗೌಡ ಹಾಗೂ ಹಿಂಬದಿ ಸವಾರ ಚಂದಪ್ಪ ಮೂಲ್ಯ ಗಂಭೀರವಾಗಿ ಗಾಯಗೊಂಡು ಮೃತಪಟ್ಟವರು.
ಶಾಮಿಯಾನ ಸಾಗಾಟದ ಪಿಕಪ್ ವಾಹನವು ಬಳ್ಳಮಂಜ ಕಡೆಯಿಂದ ಪಣಕಜೆ ಕಡೆಗೆ ಸಾಗುತ್ತಿತ್ತು. ಇದೇ ವೇಳೆ ಪಣಕಜೆಯಿಂದ ಬಳ್ಳಮಂಜದ ಕಡೆಗೆ ಬರುತ್ತಿದ್ದ ಆಕ್ಟಿವಾ ಸ್ಕೂಟರ್ಗೆ ಪಾಲ್ಯರ ಸಮೀಪ ಪಿಕಪ್ ವಾಹನ ನೇರವಾಗಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಢಿಕ್ಕಿಯ ತೀವ್ರತೆಗೆ ಹಿಂಬದಿ ಸವಾರ ಚಂದಪ್ಪ ಮೂಲ್ಯ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಲೆಗೆ ಗಂಭೀರ ಗಾಯಗೊಂಡಿದ್ದ ಡಾಕಯ್ಯ ಗೌಡ ಅವರನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
PublicNext
08/06/2026 08:21 pm
LOADING...