ದಾವಣಗೆರೆ: ಪತಿಯೊಂದಿಗೆ ಜಗಳವಾಡಿ ತವರಿಗೆ ತೆರಳುತ್ತಿದ್ದ 41 ವರ್ಷದ ಮಹಿಳೆಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜೂನ್ 3ರಂದು ನಡೆದ ಈ ಹೇಯ ಕೃತ್ಯ ತಡವಾಗಿ ಬೆಳಕಿಗೆ ಬಂದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಪತಿ ಜತೆ ಜಗಳವಾಡಿ ತವರಿಗೆ ಹೊರಟಿದ್ದ ಮಹಿಳೆಯನ್ನು ಹಂದಿ ಬೇಟೆಗೆ ತೆರಳಿದ್ದ ಯುವಕರ ಗುಂಪೊಂದು ಗಮನಿಸಿದೆ. ಬಳಿಕ, "ಸುಸ್ತಾಗಿದೆಯಾ ಅಕ್ಕ, ಕೂಲ್ ಡ್ರಿಂಕ್ಸ್ ಕುಡಿ" ಎಂದು ನಂಬಿಸಿ, ಪಾನೀಯದಲ್ಲಿ ಮದ್ಯ ಬೆರೆಸಿ ಕುಡಿಸಿದ್ದಾರೆ. ನಂತರ ಮಹಿಳೆಯನ್ನು ತೋಟಕ್ಕೆ ಕರೆದುಕೊಂಡು ಹೋಗಿ ರಾತ್ರಿಯಿಂದ ಮುಂಜಾನೆಯವರೆಗೂ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಇಷ್ಟಕ್ಕೆ ನಿಲ್ಲದೆ, ಆರೋಪಿಗಳು ಮಹಿಳೆಯ ಬೆತ್ತಲೆ ಫೋಟೋ ಹಾಗೂ ವಿಡಿಯೋಗಳನ್ನು ಚಿತ್ರೀಕರಿಸಿ ವಿಕೃತ ಸಂತೋಷ ಪಟ್ಟಿದ್ದಾರೆ. ಅಲ್ಲದೆ, ಈ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಮೂಲಕ ಇನ್ನಷ್ಟು ಅಮಾನವೀಯವಾಗಿ ವರ್ತಿಸಿದ್ದಾರೆ.
ಘಟನೆ ಬಳಿಕ ಗ್ರಾಮದಲ್ಲಿ ಗುಸುಗುಸು ಚರ್ಚೆ ಆರಂಭವಾಗಿ, ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಆರೋಪಿಗಳು ವಿಡಿಯೋಗಳನ್ನು ಡಿಲೀಟ್ ಮಾಡಿದ್ದಾರೆ. ಆದರೆ, ಸಂತ್ರಸ್ತ ಮಹಿಳೆ ಬಸವಪಟ್ಟಣ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಕರಣ ಸಂಬಂಧ ಇಸ್ತ್ರೀ ನಾಗರಾಜ್, ನಾಗರಾಜ್, ಅರ್ಜುನಾ, ಬಸವಂತ, ಕುಂದೂರು ಮಾರುತಿ, ಹೆಗ್ಗ ಮಾರುತಿ, ಮನು, ಜೋಗಿ ಸುನೀಲ್, ಪ್ರದೀಪ್ ಹಾಗೂ ಮಧು ಸೇರಿದಂತೆ ಒಟ್ಟು ಹತ್ತು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳೆಲ್ಲರೂ ಯಳೋದಹಳ್ಳಿ ಗ್ರಾಮದವರಾಗಿದ್ದಾರೆ.
ಘಟನಾ ಸ್ಥಳಕ್ಕೆ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಚ್.ಟಿ. ಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂತ್ರಸ್ತ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆರೋಪಿಗಳನ್ನೂ ಬಸವಪಟ್ಟಣ ಪೊಲೀಸ್ ಠಾಣೆಯಿಂದ ಆಸ್ಪತ್ರೆಗೆ ಸ್ಥಳಾಂತರಿಸಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಚನ್ನಗಿರಿ ತಾಲೂಕು ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಬಳಿಕ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
PublicNext
09/06/2026 04:46 pm