ಸಕಲೇಶಪುರ: ಭಾರತದ ಸುದೀರ್ಘಾವಧಿಯ ಪ್ರಧಾನಿಗಳಲ್ಲಿ ಒಬ್ಬರಾಗಿರುವ ಹಾಗೂ ಪ್ರಧಾನಿಯಾಗಿ 12 ವರ್ಷಗಳ ಕಾಲ ಸಮರ್ಥ, ಸ್ಥಿರ ಮತ್ತು ಜನಪರ ಆಡಳಿತ ನೀಡಿದ ಹೆಗ್ಗಳಿಕೆಗೆ ಪಾತ್ರರಾಗಿರುವ ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಗೌರವಾರ್ಥ ಸಕಲೇಶಪುರ ಮಂಡಲ ಬಿಜೆಪಿ ವತಿಯಿಂದ ನಗರದ ಶ್ರೀ ಸಕಲೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನಾ ಕಾರ್ಯಕ್ರಮ ಆಯೋಜಿಸಲಾಯಿತು.
ಈ ಸಂದರ್ಭದಲ್ಲಿ ದೇಶದ ಅಭಿವೃದ್ಧಿ, ಸುಭದ್ರತೆ, ಸಮೃದ್ಧಿ ಹಾಗೂ ಜನಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ, ಮತ್ತಷ್ಟು ಶಕ್ತಿ, ಚೈತನ್ಯ ಮತ್ತು ಯಶಸ್ಸು ಲಭಿಸಲಿ ಎಂದು ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಭಾರತವು ಜಾಗತಿಕ ಮಟ್ಟದಲ್ಲಿ ತನ್ನ ಪ್ರಭಾವವನ್ನು ಹೆಚ್ಚಿಸಿಕೊಂಡಿದ್ದು, ಅಭಿವೃದ್ಧಿ, ಮೂಲಸೌಕರ್ಯ, ಆರ್ಥಿಕತೆ, ರಾಷ್ಟ್ರೀಯ ಭದ್ರತೆ ಹಾಗೂ ಜನಸೇವೆಯ ವಿವಿಧ ಕ್ಷೇತ್ರಗಳಲ್ಲಿ ಮಹತ್ವದ ಸಾಧನೆಗಳನ್ನು ದಾಖಲಿಸಿದೆ ಎಂದು ಮುಖಂಡರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಸಕಲೇಶಪುರ ಶಾಸಕ ಸಿಮೆಂಟ್ ಮಂಜು, ಬಿಜೆಪಿ ಮಾಜಿ ಅಧ್ಯಕ್ಷ ರಾಮಚಂದ್ರಗೌಡ, ಅಗ್ನಿ ಸೋಮಶೇಖರ್, ಬಾಬಣ್ಣ, ಹರೀಶ್ ಬ್ಯಾಕರಳ್ಳಿ, ಜಯಣ್ಣ, ಮೋಹನ್, ವಿನಯ್, ಪರಮೇಶ್, ಮದನ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.
ಅಲ್ಲದೆ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಬಬಿತಾ ವಿಶ್ವನಾಥ್, ವನಜಾಕ್ಷಿ, ಚೇತನ, ಶೋಭಾ ಸೇರಿದಂತೆ ಮಹಿಳಾ ಕಾರ್ಯಕರ್ತೆಯರು, ಮಂಡಲದ ಪ್ರಧಾನ ಕಾರ್ಯದರ್ಶಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು ವಿಶೇಷ ಪೂಜೆ ಮತ್ತು ಪ್ರಾರ್ಥನೆಯಲ್ಲಿ ಪಾಲ್ಗೊಂಡರು.
ಕಾರ್ಯಕ್ರಮವು ಭಕ್ತಿಭಾವ ಮತ್ತು ಸಂಭ್ರಮದ ವಾತಾವರಣದಲ್ಲಿ ನಡೆಯಿತು. ಈ ವೇಳೆ ಪ್ರಧಾನಿ ಮೋದಿ ಅವರ ನಾಯಕತ್ವ, ದೇಶಸೇವೆಯ ಬದ್ಧತೆ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಸ್ಮರಿಸಿ ಬಿಜೆಪಿ ಕಾರ್ಯಕರ್ತರು ಅಭಿನಂದನೆ ಸಲ್ಲಿಸಿದರು.
PublicNext
10/06/2026 04:37 pm