ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸ್ಟೆಲ್ ಸಾಂಬಾರ್‌ನಲ್ಲಿ ಹಲ್ಲಿ: 15 ವಿದ್ಯಾರ್ಥಿನಿಯರು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಹಾಸನ ತಾಲೂಕಿನ ಸಾರಾಪುರದಲ್ಲಿರುವ ಕೃಷಿ ವಿಜ್ಞಾನ ಕಾಲೇಜಿನ ಹಾಸ್ಟೆಲ್‌ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಹಲ್ಲಿ ಬಿದ್ದ ಸಾಂಬಾರ್ ಸೇವಿಸಿದ 15 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ.

ಬುಧವಾರ ರಾತ್ರಿ ವಿದ್ಯಾರ್ಥಿನಿಯರು ಊಟ ಮಾಡುತ್ತಿದ್ದಾಗ ಸಾಂಬಾರ್‌ನಲ್ಲಿ ಹಲ್ಲಿ ಪತ್ತೆಯಾಗಿದೆ. ತಕ್ಷಣವೇ ಹಲವು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು, ಅವರಲ್ಲಿ ತೀವ್ರ ಅಸ್ವಸ್ಥಗೊಂಡ ಆರು ಮಂದಿಗೆ ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಡುಗೆ ಅನಿಲ ಸಿಲಿಂಡರ್ ಕೊರತೆಯಿಂದಾಗಿ ಹಾಸ್ಟೆಲ್ ಸಿಬ್ಬಂದಿ ಹೊರಗೆ ಸೌದೆ ಒಲೆಯಲ್ಲಿ ಅಡುಗೆ ಮಾಡುತ್ತಿದ್ದ ಸಂದರ್ಭದಲ್ಲಿ ಈ ಅಚಾತುರ್ಯ ಸಂಭವಿಸಿದೆ ಎಂದು ಆರೋಪಿಸಲಾಗಿದೆ.

ಸುಮಾರು 400 ವಿದ್ಯಾರ್ಥಿನಿಯರು ಇರುವ ಈ ಹಾಸ್ಟೆಲ್‌ಗೆ ಅಡುಗೆ ಅನಿಲ ಸಿಲಿಂಡರ್‌ಗಳ ಕೊರತೆ ಬಹುದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಹಾಸ್ಟೆಲ್‌ಗೆ ವಾರಕ್ಕೆ ನಾಲ್ಕರಿಂದ ಆರು ವಾಣಿಜ್ಯ ಸಿಲಿಂಡರ್‌ಗಳ ಅವಶ್ಯಕತೆ ಇದ್ದರೂ, ಗ್ಯಾಸ್ ಏಜೆನ್ಸಿ ಕೇವಲ ಒಂದು ಅಥವಾ ಎರಡು ಸಿಲಿಂಡರ್‌ಗಳನ್ನು ಮಾತ್ರ ಪೂರೈಸುತ್ತಿದೆ. ಈ ಕಾರಣದಿಂದಾಗಿ, ಅಡುಗೆ ಮನೆಯ ಹೊರಗೆ ಸೌದೆ ಒಲೆಯಲ್ಲಿ ಅಡುಗೆ ಮಾಡುವ ಅನಿವಾರ್ಯತೆ ಸೃಷ್ಟಿಯಾಗಿದೆ. ಇದೇ ಪರಿಸ್ಥಿತಿಯು ಅಡುಗೆಮನೆಯಲ್ಲಿ ಶುಚಿತ್ವದ ಕೊರತೆಗೆ ಕಾರಣವಾಗಿ, ಹಲ್ಲಿ ಬಿದ್ದ ಆಹಾರ ಸೇವಿಸಿ ವಿದ್ಯಾರ್ಥಿನಿಯರು ಅಸ್ವಸ್ಥಗೊಳ್ಳಲು ದಾರಿಯಾಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿದ ಡಿಹೆಚ್‌ಓ ಅನಿಲ್‌ಕುಮಾರ್ ಅವರು ಹಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿದ್ದಾರೆ.

Edited By : Nirmala Aralikatti
PublicNext

PublicNext

11/06/2026 02:39 pm

Cinque Terre

3.76 K

Cinque Terre

0

ಸಂಬಂಧಿತ ಸುದ್ದಿ