ಗದಗ: ಮಕ್ಕಳನ್ನು ಬಾಲ ಕಾರ್ಮಿಕರನ್ನಾಗದಂತೆ ತಡೆಯುವುದು ಪ್ರತಿಯೊಬ್ಬರ ಸಾಮಾಜಿಕ ಜವಾಬ್ದಾರಿಯಾಗಿದ್ದು, ಶಿಕ್ಷಣದಿಂದ ಯಾವುದೇ ಮಗು ವಂಚಿತವಾಗದAತೆ ಎಲ್ಲರೂ ಕಾಳಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾಮಿಕ ಇಲಾಖೆ, ಜಿಲ್ಲಾ ಕಾರ್ಮಿಕ ನಿರ್ಮೂಲನ ಯೋಜನಾ ಸೊಸೈಟಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ , ಗದಗ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿಶ್ವ ಬಾಲಕ ಕಾರ್ಮಿಕ ಪದ್ಧತಿ ವಿರೋಧಿ ದಿನದ ಪ್ರಮಾಣ ಬೋಧಿಸಿ ಮಾತನಾಡಿದ ಅವರು, ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನವು ಕೇವಲ ಆಚರಣೆಯ ದಿನವಲ್ಲ, ಸಮಾಜವಾಗಿ ನಾವು ಪುನಃ ಎಚ್ಚರಿಸಿಕೊಳ್ಳಬೇಕಾದ ಸಂದರ್ಭವಾಗಿದೆ ಎಂದು ಹೇಳಿದರು.
ಮಕ್ಕಳು ಓದುವ ವಯಸ್ಸಿನಲ್ಲಿ ದಿಕ್ಕುತಪ್ಪಿದರೆ ಅದರ ದುಷ್ಪರಿಣಾಮಗಳನ್ನು ಸಮಾಜವು ದಿನನಿತ್ಯ ಕಾಣುತ್ತಿದೆ. ಮಕ್ಕಳಿಗೆ ಸರಿಯಾದ ಮಾರ್ಗದರ್ಶನ, ಶಿಕ್ಷಣ ಮತ್ತು ಉತ್ತಮ ಮೌಲ್ಯಗಳನ್ನು ನೀಡುವುದು ಅತ್ಯಂತ ಅಗತ್ಯವಾಗಿದೆ. ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತ ಬಾಲ ಕಾರ್ಮಿಕರು ಕಂಡುಬAದಲ್ಲಿ ತಕ್ಷಣ ಸಂಬAಧಿಸಿದ ಅಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಮಕ್ಕಳಿಗೆ ಕೇವಲ ವಿದ್ಯಾಭ್ಯಾಸವಷ್ಟೇ ಅಲ್ಲ, ಉತ್ತಮ ಬುದ್ಧಿವಂತಿಕೆ, ನೈತಿಕ ಮೌಲ್ಯಗಳು ಹಾಗೂ ಸಾಮಾಜಿಕ ಜವಾಬ್ದಾರಿಯನ್ನೂ ಬೆಳೆಸಬೇಕು. ಮಕ್ಕಳ ಭವಿಷ್ಯವನ್ನು ಸುರಕ್ಷಿತಗೊಳಿಸುವ ಮೂಲಕವೇ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಅಭಿಪ್ರಾಯಪಟ್ಟರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡರ ಅವರು, ಶಿಕ್ಷಣವು ಪ್ರತಿಯೊಂದು ಮಗುವಿನ ಮೂಲಭೂತ ಹಕ್ಕಾಗಿದ್ದು, ಯಾವುದೇ ಕಾರಣಕ್ಕೂ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಹೇಳಿದರು.
ಶಿಕ್ಷಣದಿಂದ ದೂರವಾದ ಮಕ್ಕಳು ಹಲವಾರು ಸಾಮಾಜಿಕ ಅನಿಷ್ಟಗಳತ್ತ ತಳ್ಳಲ್ಪಡುವ ಅಪಾಯವಿದೆ. ಬಾಲ ಕಾರ್ಮಿಕತೆ, ಮಾದಕ ವಸ್ತುಗಳ ಸಾಗಾಟ, ಅಪರಾಧ ಚಟುವಟಿಕೆಗಳು ಸೇರಿದಂತೆ ವಿವಿಧ ದುಷ್ಪರಿಣಾಮಗಳಿಗೆ ಮಕ್ಕಳು ಬಲಿಯಾಗುವ ಸಾಧ್ಯತೆ ಹೆಚ್ಚಾಗುತ್ತದೆ ಎಂದು ಅವರು ಎಚ್ಚರಿಸಿದರು.
ಮಕ್ಕಳನ್ನು ಶಾಲೆಯಿಂದ ದೂರವಿಡದೆ ಶಿಕ್ಷಣದತ್ತ ಕೊಂಡೊಯ್ಯುವ ಜವಾಬ್ದಾರಿ ಪಾಲಕರು ಹಾಗೂ ಸಮಾಜದ ಮೇಲಿದೆ. ಬಾಲ ಕಾರ್ಮಿಕರು ಎಲ್ಲಿಯಾದರೂ ಕಂಡುಬAದಲ್ಲಿ ತಕ್ಷಣ ಸಮೀಪದ ಪೊಲೀಸ್ ಠಾಣೆ ಅಥವಾ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಇದರಿಂದ ಮಕ್ಕಳ ರಕ್ಷಣೆ ಮತ್ತು ಪುನರ್ವಸತಿಗೆ ನೆರವಾಗುತ್ತದೆ ಎಂದು ತಿಳಿಸಿದರು.
ಮಾದಕ ವ್ಯಸನವು ವ್ಯಕ್ತಿಯಷ್ಟೇ ಅಲ್ಲದೆ ಕುಟುಂಬದ ಸರ್ವನಾಶಕ್ಕೂ ಕಾರಣವಾಗುವ ಗಂಭೀರ ಸಮಸ್ಯೆಯಾಗಿದ್ದು, ಮಕ್ಕಳನ್ನು ವ್ಯಸನದ ದಾಸ್ಯದಿಂದ ರಕ್ಷಿಸಲು ಎಲ್ಲರೂ ಕೈಜೋಡಿಸಬೇಕು. ತಂತ್ರಜ್ಞಾನ ಯುಗದಲ್ಲಿ ಅಪರಾಧಗಳನ್ನು ಪತ್ತೆಹಚ್ಚುವುದು ಸುಲಭವಾಗಿರುವುದರಿಂದ ಪ್ರತಿಯೊಬ್ಬರೂ ಕಾನೂನು ಪಾಲನೆ ಮಾಡಿ ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ, ಮಕ್ಕಳ ಶಿಕ್ಷಣದ ಹಕ್ಕು, ಮಾದಕ ವ್ಯಸನ ನಿಯಂತ್ರಣ ಹಾಗೂ ಮಕ್ಕಳ ಸುರಕ್ಷತೆ ಕುರಿತು ಅರಿವು ಮೂಡಿಸಲಾಯಿತು. ಸಮಾಜದ ಎಲ್ಲ ವರ್ಗಗಳ ಸಹಭಾಗಿತ್ವದಿಂದ ಬಾಲ ಕಾರ್ಮಿಕ ಮುಕ್ತ ಮತ್ತು ವ್ಯಸನಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂಬ ಸಂದೇಶವನ್ನು ಕಾರ್ಯಕ್ರಮದಲ್ಲಿ ನೀಡಲಾಯಿತು.
ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಉಪನ್ಯಾಸ ನೀಡುತ್ತಾ ಮಾತನಾಡಿ ಮಕ್ಕಳ ಹಕ್ಕುಗಳ ರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ. ಬಾಲ ಕಾರ್ಮಿಕತೆಗೆ ಅವರ ಸುತ್ತಮುತ್ತಲಿನ ಪರಿಸರ, ಬಡತನ ಹಾಗೂ ಅನಕ್ಷರತೆ ಮುಖ್ಯ ಕಾರಣಗಳಾಗಿವೆ. ಮಕ್ಕಳನ್ನು ಪಾಲಕರು ತಪ್ಪದೇ ಶಾಲೆಗೆ ಕಳುಹಿಸಬೇಕು. ಮಕ್ಕಳನ್ನು ಪೋಷಣೆ ಮಾಡಲು ಪೋಷಕರು ಅರ್ಹರಾಗಿಲ್ಲವಾದರೆ ಅಂತಹ ಸಂದರ್ಭದಲ್ಲಿ ಮಕ್ಕಳ ರಕ್ಷಣೆ ಮಾಡಿ ಮಕ್ಕಳು ಶಾಲೆಯಿಂದ ಹೊರಗುಳಿಯುವಂತೆ ಮಾಡುವುದು, ಮಕ್ಕಳನ್ನು ಶಾಲೆಗೆ ಸೇರಿಸುವುದು ಸರ್ಕಾರದ ಎಂದರೆ ವಿವಿಧ ಇಲಾಖೆಗಳ ಹಾಗೂ ಸಾರ್ವಜನಿಕರ ಕರ್ತವ್ಯವಾಗಿದೆ. ಸಂವಿಧಾನವು ನಮಗೆ ಹಕ್ಕುಗಳನ್ನು ನೀಡಿದ್ದು ಮಕ್ಕಳ ರಕ್ಷಣೆಯಲ್ಲಿ ಎರಡು ಪ್ರಮುಖ ಪಾತ್ರಗಳಿರುತ್ತವೆ. ಮಕ್ಕಳ ರಕ್ಷಣೆ ಮಾಡುವುದು, ಪೋಷಣೆ ಮಾಡುವುದು ಪಾಲಕರು ಮತ್ತು ಪೋಷಕರ ಕರ್ತವ್ಯವಾಗಿದೆ. ಒಂದು ವೇಳೆ ಪೋಷಕರು ಅಸಹಾಯಕರಾದಾಗ ಅಥವಾ ಜವಾಬ್ದಾರಿ ನಿಭಾಯಿಸಲು ವಿಫಲರಾದಾಗ ಅಂತಹ ಸಂದರ್ಭದಲ್ಲಿ ರಾಜ್ಯ ಅಂದರೆ ಜಿಲ್ಲಾಡಳಿತ, ವಿವಿಧ ಇಲಾಖೆಗಳು ಮಕ್ಕಳ ರಕ್ಷಣೆಗೆ ಧಾವಿಸುವುದು ಮುಖ್ಯ ಕರ್ತವ್ಯವಾಗಿದೆ.
ಮಕ್ಕಳನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ನಮ್ಮದೇ ಮಗು ನಮ್ಮ ಅಂಗಡಿಯಲ್ಲಿ ಕುಳಿತುಕೊಂಡರೆ ತಪ್ಪೇನು ಎಂಬ ಮನೋಭಾವನೆ ತಪ್ಪು. ಮಕ್ಕಳನ್ನು ಯಾವುದೇ ರೀತಿಯ ದುಡಿಮೆಗೆ ಹಚ್ಚಿದರೂ ಅದನ್ನು ಬಾಲ ಕಾರ್ಮಿಕ ಪದ್ಧತಿ ಎಂದು ಪರಿಗಣಿಸಿ ಕಾನೂನಿನ ಪ್ರಕಾರ ಶಿಕ್ಷೆ ವಿಧಿಸಲಾಗುತ್ತದೆ.
Kshetra Samachara
12/06/2026 05:25 pm