ಧಾರವಾಡ : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹಾಗೂ ಧಾರವಾಡ ಕೃಷಿ ವಿಶ್ವವಿದ್ಯಾಲಯ ವತಿಯಿಂದ “ಫ್ರಾಮ್ ಕ್ಲಾಸ್ ರೂಮ್ ಟು ಕೋರ್ಟ್ ರೂಮ್” ಎನ್ನುವ ವಿಷಯದ ಕುರಿತು ಕಾನೂನು ವಿದ್ಯಾರ್ಥಿಗಳಿಗಾಗಿ 4ನೇ ವಲಯ ಕಾರ್ಯಾಗಾರವನ್ನು ಜೂನ್ 14 ರಂದು ಬೆಳಿಗ್ಗೆ 10 ಗಂಟೆಗೆ ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಧಾರವಾಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎನ್.ವಿ. ವಿಜಯ ತಿಳಿಸಿದರು.
ಧಾರವಾಡ ನಗರದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಅನು ಶಿವರಾಮ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಯು.ಕೃಷ್ಣರಾಜ ಅಧ್ಯಕ್ಷತೆ ವಹಿಸುವರು. ಗೌರವ ಅತಿಥಿಗಳಾಗಿ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್, ಎಚ್.ಪಿ.ಸಂದೇಶ ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್.ಶಶಿಧರ್ ಶೆಟ್ಟಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿ. ಬಸವರಾಜು ಪಾಲ್ಗೊಳ್ಳುವರು ಎಂದರು.
ಕಾನೂನು ಸೇವಾ ಪ್ರಾಧಿಕಾರ ಕಾಯ್ದೆ 1987 ಮತ್ತು ಅದರ ಉದ್ದೇಶಗಳು, ಕಾನೂನು ಕಾಲೇಜುಗಳಲ್ಲಿ ಕಾನೂನು ಸೇವೆಗಳ ಚಿಕಿತ್ಸಾಲಯಗಳು, ಕಾನೂನು ಸೇವಾ ಶಿಬಿರಗಳು ಮತ್ತು ಜನಸಂಪರ್ಕ ಕಾರ್ಯಕ್ರಮಗಳನ್ನು ಆಯೋಜಿಸುವುದು, ಕಾನೂನು ಶಿಕ್ಷಣ ಸಂಸ್ಥೆಗಳ ಪಾತ್ರ ವಿಷಯದ ಕುರಿತು ಗೋಷ್ಠಿಗಳು ಮತ್ತು ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಯಲಿವೆ.
ಈಗಾಗಲೇ ಮೈಸೂರು, ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಈ ರೀತಿಯ ಕಾರ್ಯಾಗಾರಗಳು ಜರುಗಿದ್ದವು. ಧಾರವಾಡದಲ್ಲಿ 4ನೇ ಕಾರ್ಯಾಗಾರವನ್ನು ಆಯೋಜಿಸಲಾಗುತ್ತಿದೆ. ಸುಮಾರು 1200 ಜನರು ನೋಂದಣಿ ಮಾಡಿಸಿಕೊಂಡಿದ್ದಾರೆ. ಬಳ್ಳಾರಿ, ರಾಯಚೂರು, ಬಾಗಲಕೋಟೆ, ಕಾರವಾರ, ಹಾವೇರಿ, ಗದಗ ಜಿಲ್ಲೆಗಳ ಕಾಲೇಜುಗಳಿಂದ ವಿದ್ಯಾರ್ಥಿಗಳು ಭಾಗವಹಿಸುವರು.
ಕಾರ್ಯಾಗಾರವು ಯುಟ್ಯೂಬ್ನಲ್ಲಿ ನೇರ ಪ್ರಸಾರವಾಗಲಿದೆ. ವಿದ್ಯಾರ್ಥಿಗಳಿಗೆ ಕಾನೂನುಗಳ ಬಗ್ಗೆ ಅರಿವು ಮೂಡಿಸುವುದು ಈ ಕಾರ್ಯಾಗಾರದ ಮುಖ್ಯ ಉದ್ದೇಶವಾಗಿದೆ. ಸಾರ್ವಜನಿಕರು ಕಾನೂನುಗಳನ್ನು ಯಾವ ರೀತಿ ಬಳಕೆ ಮಾಡಬೇಕು ಎಂಬುದರ ಕುರಿತು ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಅಲ್ಲಪ್ಪ ಎಂ.ಬಡಿಗೇರ, ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ನಾಗರಾಜಪ್ಪ ಇದ್ದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
12/06/2026 10:46 pm