ಉಡುಪಿ; ಜಿಲ್ಲೆಯ ಕೊಡಂಕೂರು ವಾರ್ಡ್ನಲ್ಲಿ ಡ್ರೈನೇಜ್ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಸ್ಥಳೀಯ ನಿವಾಸಿಗಳು ಆತಂಕದಲ್ಲಿ ದಿನ ಕಳೆಯುವಂತಾಗಿದೆ. ವಾರ್ಡ್ನ ಮೂಲಕ ಹರಿಯುವ ಇಂದ್ರಾಣಿ ನದಿಯಲ್ಲಿ ಹೂಳು, ಕಸ ಹಾಗೂ ಗಿಡಗಂಟಿಗಳು ಹೆಚ್ಚಾಗಿ ನೀರಿನ ಹರಿವು ಕುಂಠಿತಗೊಂಡಿದೆ. ಮಳೆಗಾಲ ಆರಂಭವಾಗಿರುವ ಈ ಸಂದರ್ಭದಲ್ಲಿ ನದಿಯನ್ನು ತಕ್ಷಣ ಸ್ವಚ್ಛಗೊಳಿಸದಿದ್ದರೆ ನೀರು ಮೇಲಕ್ಕೆ ಬಂದು ಸುತ್ತಮುತ್ತಲಿನ ಪ್ರದೇಶಗಳಿಗೆ ನುಗ್ಗುವ ಸಾಧ್ಯತೆ ಹೆಚ್ಚಾಗಿದೆ.
ಈ ಹಿಂದೆ ಕೂಡ ಇದೇ ರೀತಿಯ ಪರಿಸ್ಥಿತಿ ಉಂಟಾಗಿ ಮನೆಗಳಿಗೆ ನೀರು ನುಗ್ಗಿತ್ತು. ಹಲವು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದರೆ, ಕೆಲವರನ್ನು ದೋಣಿಗಳ ಮೂಲಕ ರಕ್ಷಣೆ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಆ ಘಟನೆ ಇನ್ನೂ ಜನರ ಮನಸ್ಸಿನಲ್ಲಿ ಹಸಿರಾಗಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಸ್ಥಳೀಯ ಕೌನ್ಸಿಲರ್ ಹಲವು ಬಾರಿ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ಸಮಸ್ಯೆಯನ್ನು ತಂದಿದ್ದರೂ, ಇದುವರೆಗೆ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಜನಪ್ರತಿನಿಧಿಗಳ ಮನವಿಗೂ ಸ್ಪಂದನೆ ಸಿಗದಿರುವುದು ಆಡಳಿತದ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತಿದೆ.
ಮಳೆ ಪ್ರಮಾಣ ಹೆಚ್ಚಾದರೆ ಮತ್ತೆ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿ ಜನರ ಜೀವ ಮತ್ತು ಆಸ್ತಿಪಾಸ್ತಿಗೆ ಹಾನಿಯಾಗುವ ಸಾಧ್ಯತೆ ಇದೆ. ಆದ್ದರಿಂದ ಜಿಲ್ಲಾಡಳಿತ ತಕ್ಷಣ ಎಚ್ಚೆತ್ತುಕೊಂಡು ಇಂದ್ರಾಣಿ ನದಿಯ ಹೂಳು ತೆಗೆಯುವ ಹಾಗೂ ಡ್ರೈನೇಜ್ ವ್ಯವಸ್ಥೆಯನ್ನು ಸುಧಾರಿಸುವ ಕಾರ್ಯ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
PublicNext
12/06/2026 10:53 pm
LOADING...