ಶಿರಸಿ: 12 ವರ್ಷಗಳ ಅಧಿಕಾರ ಅವಧಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣೀಭೂತರಾಗಿದ್ದಾರೆ, ನಮ್ಮ ಶ್ರದ್ಧಾ ಕೇಂದ್ರಗಳ ಅಭಿವೃದ್ಧಿಗೆ ಕೂಡ ಶ್ರಮವಹಿಸಿದ್ದಾರೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಅವರು ಉತ್ತರ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್ ಎಸ್ ಹೆಗಡೆಯವರ ಅಧ್ಯಕ್ಷತೆಯಲ್ಲಿ ನಗರದ ಪಂಡಿತ್ ದೀನ ದಯಾಳ್ ಭವನದಲ್ಲಿ ನಡೆದ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಅಲ್ಲದೆ ಇಂದು ದೇಶ ಸುರಕ್ಷಿತವಾಗಿ ಹಾಗೂ ಪ್ರಗತಿ ಪಥದಲ್ಲಿ ಸಾಗಲು ಅನೇಕ ಕಾರ್ಯಕ್ರಮಗಳನ್ನು ರೂಪಿಸಿ ಅವುಗಳು ಯಶಸ್ವಿಯಾಗಿ ಅನುಷ್ಠಾನ ಆಗುವಂತೆ ನೋಡಿಕೊಂಡಿದ್ದಾರೆ, ಅತಿ ಹೆಚ್ಚು ಕಾಲ ಚುನಾಯಿತ ಪ್ರಧಾನಮಂತ್ರಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಈ ಸಂದರ್ಭದಲ್ಲಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.
ಜೊತೆಗೆ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಾದ ನಾವೆಲ್ಲರೂ ಕೂಡ ಸರ್ಕಾರದ ಯೋಜನೆಗಳ ಪ್ರಯೋಜನ ಜನರಿಗೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ಕರೆ ನೀಡಿದರು.
ಮಾಜಿ ವಿಧಾನ ಪರಿಷತ್ ಸದಸ್ಯ ಸಿದ್ದರಾಮಣ್ಣ ಅವರು ಮಾತನಾಡಿ 24 ವರ್ಷಗಳ ನಂತರ ನಡೆಯುತ್ತಿರುವ ಎಸ್ಐಆರ್ ನಲ್ಲಿ ನಾವೆಲ್ಲರೂ ಅರ್ಹ ಮತದಾರರು ಪಟ್ಟಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು. ನಿಯಮಿತವಾಗಿ ನಡೆಯಬೇಕಾದ ಸಂಘಟನಾತ್ಮಕ ಸಭೆಗಳ ಕುರಿತು ಜಿಲ್ಲೆಯ 17 ಮಂಡಲಗಳಿಂದ ಆಗಮಿಸಿದ್ದ ಪ್ರಮುಖ ಪದಾಧಿಕಾರಿಗಳಿಗೆ ಮಾಹಿತಿ ನೀಡಿದರು.
ಜಿಲ್ಲಾ ಪ್ರಧಾನ ಗುರುಪ್ರಸಾದ್ ಹೆಗಡೆ ಮಾತನಾಡಿ ಎಸ್ಐಆರ್ ಗೆ ಪೂರಕವಾಗಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರಿಂದ ಆಗಬೇಕಾದ ಕೆಲಸಗಳ ಕುರಿತು, ವಿಶ್ವ ಪರಿಸರ ದಿನ ಹಾಗೂ ಅಂತರಾಷ್ಟ್ರೀಯ ಯೋಗ ದಿನದ ಕುರಿತಾಗಿ ಮಾಹಿತಿ ನೀಡಿದರು.
ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾಧ್ಯಕ್ಷ ಎನ್ ಎಸ್ ಹೆಗಡೆ ಮಾತನಾಡಿ ಯಾವೊಬ್ಬ ಅರ್ಹ ಮತದಾರ ಕೂಡ ಮತದಾರರ ಪಟ್ಟಿಯಿಂದ ಹೊರಗಡೆ ಇರಕೂಡದು ಅಂತೆಯೇ ಅಕ್ರಮ ವಲಸಿಗರು ಮತದಾರ ಪಟ್ಟಿಯಲ್ಲಿ ಸೇರ್ಪಡೆಗೊಳ್ಳದಂತೆ ಜಾಗೃತಿ ವಹಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶಿವಾನಂದ ನಾಯ್ಕ, ಮಾಜಿ ಶಾಸಕ ಸುನಿಲ್ ನಾಯ್ಕ, ವಿಭಾಗ ಸಹ ಪ್ರಭಾರಿಗಳಾದ ಆರ್ ಡಿ ಹೆಗಡೆ, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ವೆಂಕಟೇಶ ನಾಯಕ, ಪಶ್ಚಿಮ ಘಟ್ಟ ಕಾರ್ಯಪಡೆ ಮಾಜಿ ಅಧ್ಯಕ್ಷ ಗೋವಿಂದ ನಾಯ್ಕ, ರಾಜ್ಯ ವಕ್ತಾರರಾದ ಹರಿಪ್ರಕಾಶ್ ಕೋಣೆಮನೆ, ಮಾಜಿ ಜಿಲ್ಲಾಧ್ಯಕ್ಷ ಕೆ ಜಿ ನಾಯ್ಕ, ಜಿಲ್ಲಾ ಉಪಾಧ್ಯಕ್ಷ ಅಶೋಕ ಚಲವಾದಿ, ಶಿಕ್ಷಣ ಪ್ರಕೋಷ್ಠ ರಾಜ್ಯ ಸಹ ಸಂಚಾಲಕರಾದ ಎಂ ಜಿ ಭಟ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಶ್ರೀಮತಿ ಶಿವಾನಿ ಶಾಂತಾರಾಮ್, ಯುವಮೋರ್ಚಾ ಜಿಲ್ಲಾಧ್ಯಕ್ಷ ಪ್ರೇಮಕುಮಾರ ನಾಯ್ಕ ಉಪಸ್ಥಿತರಿದ್ದರು.
Kshetra Samachara
14/06/2026 12:15 pm