ಕೋಲಾರ: ಕೋಲಾರ ನಗರದ ಕಾರಂಜಿಕಟ್ಟೆ ಬಡಾವಣೆಯಲ್ಲಿ ಸಂಪ್ಗೆ ಬಿದ್ದು ಮೂರು ವರ್ಷದ ಮಗು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಕಾರಂಜಿಕಟ್ಟೆ ಬಡಾವಣೆಯ 10ನೇ ಕ್ರಾಸ್ ನಿವಾಸಿಗಳಾದ ವಿಕಾಸ್ ಮತ್ತು ಹಂಸ ದಂಪತಿಯ ಮೂರು ವರ್ಷದ ಪುತ್ರ ಯಶಸ್ ಈ ದುರ್ಘಟನೆಯಲ್ಲಿ ಮೃತಪಟ್ಟಿದ್ದಾನೆ. ಈ ಘಟನೆ ಕುಟುಂಬದಲ್ಲಿ ತೀವ್ರ ಆಘಾತ ಮತ್ತು ದುಃಖದ ವಾತಾವರಣ ಸೃಷ್ಟಿಸಿದೆ.
ಮಗು ಯಶಸ್ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಸಮೀಪದಲ್ಲಿದ್ದ ಸಂಪ್ಗೆ ಬಿದ್ದಿದೆ ಎನ್ನಲಾಗಿದೆ. ಮಗುವಿನ ಕೂಗು ಕೇಳಿದ ಕೂಡಲೇ ಕುಟುಂಬಸ್ಥರು ಹಾಗೂ ಸ್ಥಳೀಯರು ತಕ್ಷಣ ರಕ್ಷಣೆಗೆ ಧಾವಿಸಿ ನೀರಿನಿಂದ ಹೊರತೆಗೆದಿದ್ದಾರೆ. ಬಳಿಕ ಮಗುವನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರು ಪರೀಕ್ಷಿಸಿ ಮಗು ಈಗಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.
ಮಗುವಿನ ಅಕಾಲಿಕ ಸಾವಿನಿಂದ ಪೋಷಕರು ತೀವ್ರ ದುಃಖಕ್ಕೊಳಗಾಗಿದ್ದು, ಅವರ ಆಕ್ರಂದನ ಮನಕಲಕುವಂತಿತ್ತು. ಈ ದುರ್ಘಟನೆಯಿಂದಾಗಿ ಕಾರಂಜಿಕಟ್ಟೆ ಬಡಾವಣೆಯಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ಘಟನೆ ಗಲ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.
PublicNext
15/06/2026 11:28 am
LOADING...