ಅಯೋಧ್ಯೆ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ದೇಣಿಗೆ ಮತ್ತು ಹಣಕಾಸು ನಿರ್ವಹಣೆಯಲ್ಲಿ ನಡೆದಿವೆ ಎನ್ನಲಾದ ಅವ್ಯವಹಾರಗಳ ಆರೋಪದ ಬೆನ್ನಲ್ಲೇ, ಉತ್ತರ ಪ್ರದೇಶ ಸರ್ಕಾರ ಶನಿವಾರದಂದು ಮೂರು ಸದಸ್ಯರ ವಿಶೇಷ ತನಿಖಾ ದಳವನ್ನು (SIT) ರಚಿಸಿ ಆದೇಶ ಹೊರಡಿಸಿದೆ.
ರಾಮಮಂದಿರದ ಹೆಸರಿಗೆ ಮಸಿ ಬಳಿಯಲು ಕೆಲವು ಶಕ್ತಿಗಳು ಪ್ರಯತ್ನಿಸುತ್ತಿದ್ದು, ಈ ಕುರಿತ ಅಪಪ್ರಚಾರಗಳನ್ನು ತಡೆದು ಸತ್ಯವನ್ನು ಹೊರತರಲು ತನಿಖೆ ಅತ್ಯಗತ್ಯ ಎಂದು ಸ್ವತಃ ರಾಮಮಂದಿರ ಟ್ರಸ್ಟ್ ಸರ್ಕಾರಕ್ಕೆ ಮನವಿ ಮಾಡಿತ್ತು. ಟ್ರಸ್ಟ್ನ ಕೋರಿಕೆಯ ಮೇರೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕಟ್ಟುನಿಟ್ಟಿನ ನಿರ್ದೇಶನದ ಮೇರೆಗೆ ಈ ಹೈಪವರ್ ಎಸ್ಐಟಿ (SIT) ತಂಡವನ್ನು ರಚಿಸಲಾಗಿದೆ ಎಂದು ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.
ಮೆಕ್ಯಾನಿಕ್ ಆಗಿದ್ದ ದೇವಸ್ಥಾನದ ನೌಕರನ ಮನೆಯಲ್ಲಿ ಲಕ್ಷ ಲಕ್ಷ ನಗದು ಜಪ್ತಿ!
ಈ ತನಿಖೆಯ ನಡುವೆಯೇ ಅಯೋಧ್ಯೆಯಲ್ಲಿ ಭಾರಿ ಮುಖಭಂಗ ತರುವಂತಹ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಅಯೋಧ್ಯೆಯ ರುದೌಲಿ ಎಂಬಲ್ಲಿ ದೇವಸ್ಥಾನದ ಆಡಳಿತ ಮಂಡಳಿಯಲ್ಲಿ ಕೆಲಸ ಮಾಡುತ್ತಿದ್ದ ಲವಕುಶ್ ಮಿಶ್ರಾ ಎಂಬಾತನ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಬರೋಬ್ಬರಿ 10 ರಿಂದ 12 ಲಕ್ಷ ರೂಪಾಯಿ ನಗದನ್ನು ವಶಪಡಿಸಿಕೊಂಡಿದ್ದಾರೆ.
ವಿಶೇಷವೆಂದರೆ, ಈ ಲವಕುಶ್ ಮಿಶ್ರಾ ದೇವಸ್ಥಾನದ ಆಡಳಿತ ಮಂಡಳಿಯಲ್ಲಿ ಕೆಲಸಕ್ಕೆ ಸೇರುವ ಮುನ್ನ ಕಾರ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಎಂದು 'ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್' ವರದಿ ಮಾಡಿದೆ. ಸದ್ಯ ನಗದು ಪತ್ತೆಯಾಗಿರುವ ಬೆನ್ನಲ್ಲೇ ರಾಮಮಂದಿರದ ದೇಣಿಗೆ ಹಣ ದುರುಪಯೋಗವಾಗಿದೆಯೇ ಎಂಬ ಅನುಮಾನ ದಟ್ಟವಾಗಿದ್ದು, ಎಸ್ಐಟಿ ತನಿಖೆಯಿಂದಷ್ಟೇ ಸಂಪೂರ್ಣ ಸತ್ಯ ಹೊರಬರಬೇಕಿದೆ.
PublicNext
15/06/2026 11:48 am