ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಇದೀಗ ಮಹತ್ವದ ಘಟ್ಟ ತಲುಪಿದೆ. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಡಿ ಗ್ಯಾಂಗ್ನ ಎಲ್ಲಾ 17 ಆರೋಪಿಗಳ ವಿರುದ್ಧದ ಪ್ರಕರಣದ ಟ್ರಯಲ್, ಇಂದಿನಿಂದ ಹೊಸ ನ್ಯಾಯಾಧೀಶರ ಮುಂದೆ ಆರಂಭವಾಗಲಿದೆ. ಬೆಂಗಳೂರಿನ ಸಿಸಿಹೆಚ್-59 ಸೆಷನ್ಸ್ ನ್ಯಾಯಾಲಯದಲ್ಲಿ, ನ್ಯಾಯಾಧೀಶೆ ಸುಜಾತ ಮಡಿವಾಳಪ್ಪ ಸಾಂಬ್ರಾಣಿ ಮುಂದೆ ಈ ವಿಚಾರಣೆ ಪ್ರಾರಂಭವಾಗುತ್ತಿದ್ದು, ಇದು ಪ್ರಕರಣದ ಪ್ರಮುಖ ಬೆಳವಣಿಗೆಯಾಗಿದೆ. ಈ ಮೂಲಕ, ಹಲವು ಹಂತಗಳನ್ನು ದಾಟಿರುವ ಈ ಪ್ರಕರಣ ಅಧಿಕೃತ ವಿಚಾರಣಾ ಹಂತಕ್ಕೆ ಕಾಲಿಟ್ಟಿದೆ. ಮುಂದಿನ ದಿನಗಳಲ್ಲಿ ಈ ವಿಚಾರಣೆ ಯಾವ ಹಂತದಲ್ಲಿ ಸಾಗಲಿದೆ ಎಂಬ ಕುತೂಹಲ ಎಲ್ಲರಲ್ಲಿ ಮೂಡಿದೆ.
ಪ್ರಕರಣದ ಟ್ರಯಲ್ ಹಂತದಲ್ಲಿ ಸಾಕ್ಷಿಗಳ ವಿಚಾರಣೆ, ದಾಖಲೆಗಳ ಪರಿಶೀಲನೆ ಹಾಗೂ ವಾದ-ಪ್ರತಿವಾದಗಳು ನಡೆಯಲಿವೆ. ನ್ಯಾಯಾಲಯದಲ್ಲಿ ಪ್ರತಿಯೊಬ್ಬ ಆರೋಪಿಯ ಪಾತ್ರ ಮತ್ತು ಸಾಕ್ಷ್ಯಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಗುತ್ತದೆ.
ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್ ಮತ್ತು ಪವಿತ್ರಾ ಗೌಡ ಅವರು ಪರಪ್ಪನ ಅಗ್ರಹಾರ ಕಾರಾಗೃಹದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗುವ ಸಾಧ್ಯತೆ ಇದೆ. ಉಳಿದ ಆರೋಪಿಗಳು ಖುದ್ದಾಗಿ ನ್ಯಾಯಾಲಯಕ್ಕೆ ಆಗಮಿಸಿ ವಿಚಾರಣೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಪ್ರಕರಣವನ್ನು ಶೀಘ್ರವಾಗಿ ಮುಕ್ತಾಯಗೊಳಿಸುವ ಉದ್ದೇಶದಿಂದ, ಪ್ರತಿದಿನ ಅಥವಾ ವಾರದಲ್ಲಿ ನಾಲ್ಕು ದಿನಗಳ ಕಾಲ ನಿರಂತರ ಟ್ರಯಲ್ ನಡೆಸುವ ಕುರಿತು ನ್ಯಾಯಾಲಯದಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.
PublicNext
15/06/2026 12:36 pm