ಸಕಲೇಶಪುರ : ಅರಣ್ಯ ಭೂಮಿ ಸಂರಕ್ಷಣೆ ಹಾಗೂ ಅಕ್ರಮ ಒತ್ತುವರಿಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಅರಣ್ಯ ಇಲಾಖೆಯ ಕಾರ್ಯಾಚರಣೆಯಲ್ಲಿ ತಾಲೂಕಿನ ಹೊಡಚಹಳ್ಳಿ ಗ್ರಾಮದ ಡೀಮ್ಡ್ ಅರಣ್ಯ ಪ್ರದೇಶದಲ್ಲಿ ಮಾಡಲಾಗಿದ್ದ ಸುಮಾರು 22 ಎಕರೆ ಅಕ್ರಮ ಒತ್ತುವರಿಯನ್ನು ತೆರವುಗೊಳಿಸಲಾಗಿದೆ.
ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ, ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಅವರ ನೇತೃತ್ವದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ತ್ವರಿತ ಪ್ರತಿಕ್ರಿಯೆ ತಂಡದ (RRT) ಸದಸ್ಯರು ಕಾರ್ಯಾಚರಣೆ ನಡೆಸಿದರು
ಹೊಡಚಹಳ್ಳಿ ಗ್ರಾಮದ ಸರ್ವೇ ನಂ. 21 ಮತ್ತು 28ರಲ್ಲಿ ಸಚಿನ್ ಹಾಗೂ ರಜಿತ್ ಎಂಬುವವರು ಡೀಮ್ಡ್ ಅರಣ್ಯ ಪ್ರದೇಶದ ಸುಮಾರು 22 ಎಕರೆ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ತಂತಿ ಬೇಲಿ ನಿರ್ಮಿಸಿರುವುದು ಇಲಾಖೆಯ ಗಮನಕ್ಕೆ ಬಂದಿತ್ತು.
ಖಚಿತ ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿದ ಅಧಿಕಾರಿಗಳು ಅಕ್ರಮವಾಗಿ ಅಳವಡಿಸಲಾಗಿದ್ದ ಕಂಬಗಳನ್ನು ತೆರವುಗೊಳಿಸಿ, ತಂತಿ ಬೇಲಿಯನ್ನು ಇಲಾಖೆಯ ವಶಕ್ಕೆ ಪಡೆದುಕೊಂಡರು.
ಅರಣ್ಯ ಪ್ರದೇಶಗಳ ಮೇಲಿನ ಅತಿಕ್ರಮಣಗಳು ಪರಿಸರ ಹಾಗೂ ಜೀವ ವೈವಿಧ್ಯಕ್ಕೆ ಧಕ್ಕೆ ಉಂಟುಮಾಡುವ ಹಿನ್ನೆಲೆಯಲ್ಲಿ ಅರಣ್ಯ ಭೂಮಿಯನ್ನು ಸಂರಕ್ಷಿಸುವ ಉದ್ದೇಶದಿಂದ ಇಲಾಖೆ ನಿರಂತರ ಕಾರ್ಯಾಚರಣೆ ನಡೆಸುತ್ತಿದೆ.
ಅರಣ್ಯ ಭೂಮಿಯನ್ನು ಅತಿಕ್ರಮಿಸುವವರ ವಿರುದ್ಧ ಅರಣ್ಯ ಕಾಯ್ದೆಯಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಅರಣ್ಯ ಸಂಪತ್ತು ಹಾಗೂ ಸರ್ಕಾರಿ ಭೂಮಿಯ ರಕ್ಷಣೆಗೆ ಇಲಾಖೆ ಬದ್ಧವಾಗಿದ್ದು, ಇಂತಹ ಅಕ್ರಮ ಚಟುವಟಿಕೆಗಳ ವಿರುದ್ಧ ಮುಂದಿನ ದಿನಗಳಲ್ಲಿಯೂ ಕಟ್ಟುನಿಟ್ಟಿನ ಕ್ರಮ ಮುಂದುವರಿಯಲಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.
PublicNext
15/06/2026 05:19 pm
LOADING...