ಚಳ್ಳಕೆರೆ: ರೈತರ ಸಮಸ್ಯೆಗಳಿಗೆ ಸರ್ಕಾರ, ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಸೂಕ್ತ ಸ್ಪಂದನೆ ನೀಡುತ್ತಿಲ್ಲ ಎಂದು ಆರೋಪಿಸಿ ರೈತರು ಬುಧವಾರ ತಾಲೂಕು ಮಟ್ಟದ ರೈತರ ಕುಂದುಕೊರತೆ ಸಭೆಯನ್ನು ಬಹಿಷ್ಕರಿಸಿ ಹೊರ ನಡೆದರು.
ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ರೈತರ ಕುಂದುಕೊರತೆ ಸಭೆಯಲ್ಲಿ ಈ ಬೆಳವಣಿಗೆ ಕಂಡುಬಂತು. ಸಭೆಯ ಆರಂಭದಲ್ಲಿ ಉಪವಿಭಾಗಾಧಿಕಾರಿ ಕಾಂತರಾಜ್ ಮಾತನಾಡಿ, ರೈತರ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿಯೇ ಬಗೆಹರಿಸುವ ಉದ್ದೇಶದಿಂದ ಸಭೆ ಕರೆಯಲಾಗಿದೆ. ರೈತರು ತಮ್ಮ ಅಹವಾಲುಗಳನ್ನು ಮುಕ್ತವಾಗಿ ಮಂಡಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಮಾತನಾಡಿ, ಬೆಳೆ ವಿಮೆ ಹಣ ವಿತರಣೆಯಲ್ಲಿ ಭಾರೀ ಅಕ್ರಮಗಳು ನಡೆದಿದ್ದು, ಸಾವಿರಾರು ರೈತರಿಗೆ ವಿಮೆ ಸೌಲಭ್ಯ ಸಕಾಲಕ್ಕೆ ದೊರೆತಿಲ್ಲ ಎಂದು ಆರೋಪಿಸಿದರು. ರೈತರ ಪ್ರತಿಭಟನೆಗಳಿಗೂ ಜಿಲ್ಲಾಡಳಿತ ಸೂಕ್ತ ಸ್ಪಂದನೆ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತ ಸಂಘದ ಅಧ್ಯಕ್ಷ ಕೆ.ಸಿ. ಭೂತಯ್ಯ ಮಾತನಾಡಿ, ಬೆಳೆ ಸಮೀಕ್ಷೆಯಲ್ಲಿ ಶೇ.85ರಷ್ಟು ನಷ್ಟವಾಗಿದೆ ಎಂದು ವರದಿ ನೀಡಿದ್ದರೂ ಪರಿಹಾರ ವಿತರಣೆಯಲ್ಲಿ ಪಾರದರ್ಶಕತೆ ಇಲ್ಲ ಎಂದು ದೂರಿದರು. ಒಂದು ಎಕರೆಗೆ ₹17 ಸಾವಿರದಿಂದ ₹20 ಸಾವಿರದವರೆಗೆ ವಿಮೆ ದೊರೆಯಬೇಕಿದ್ದರೆ ಹಲವರಿಗೆ ಕೇವಲ ₹300ರಿಂದ ₹6 ಸಾವಿರದವರೆಗೆ ಮಾತ್ರ ನೀಡಲಾಗಿದೆ ಎಂದು ಆರೋಪಿಸಿದರು. ಅವೈಜ್ಞಾನಿಕ ಬೆಳೆ ಸಮೀಕ್ಷೆ, ವಿಮೆ ವಿತರಣೆಯಲ್ಲಿನ ಅಸಮಾನತೆ ಹಾಗೂ ವಿವಿಧ ಅಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ ರೈತರು ಸಭೆಯನ್ನು ಬಹಿಷ್ಕರಿಸಿ ಹೊರನಡೆದರು.
PublicNext
17/06/2026 08:40 pm
LOADING...