ಹಾಸನ : ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಜನಪರವಾಗಿ ಕಾರ್ಯನಿರ್ವಹಿಸುತ್ತಿರುವ ಇಂಜಿನಿಯರ್ ಕವಿತಾ ಅವರ ವಿರುದ್ಧ ಇಲಾಖಾ ವಿಚಾರಣೆ ನಡೆಸಲು ಮುಂದಾಗಿರುವ ಕ್ರಮದ ವಿರುದ್ಧ ಮಲ್ನಾಡು ರಕ್ಷಣಾ ಸೇನೆಯ ರಾಜ್ಯಾಧ್ಯಕ್ಷ ಜಾನೇಕೆರೆ ಸಾಗರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಸಾರ್ವಜನಿಕರ ಪರವಾಗಿ ನಿಂತು ಅಕ್ರಮಗಳನ್ನು ಬಯಲಿಗೆಳೆಯುತ್ತಿರುವ ಅಧಿಕಾರಿಯೊಬ್ಬರ ವಿರುದ್ಧ ಇಲಾಖಾ ವಿಚಾರಣೆ ನಡೆಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಇದರಿಂದ ಪ್ರಾಮಾಣಿಕ ಅಧಿಕಾರಿಗಳನ್ನು ಮಾನಸಿಕವಾಗಿ ಕುಗ್ಗಿಸುವ ಪ್ರಯತ್ನ ನಡೆಯುತ್ತಿರುವಂತೆ ಕಾಣುತ್ತಿದೆ" ಎಂದು ಆರೋಪಿಸಿದರು.
"ಅಗಿಲೆ ಯೋಗೇಶ್ ವಿರುದ್ಧ ಈ ಹಿಂದೆ ವಿವಿಧ ಆರೋಪಗಳು ಹಾಗೂ ಪ್ರಕರಣಗಳು ದಾಖಲಾಗಿರುವ ಮಾಹಿತಿ ಇದ್ದರೂ, ಅವರ ದೂರಿನ ಆಧಾರದ ಮೇಲೆ ಪ್ರಾಮಾಣಿಕ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿರುವುದು ಸರಿಯಲ್ಲ. ಇಲಾಖೆಯ ಕೆಲ ಉನ್ನತ ಅಧಿಕಾರಿಗಳು ತಮ್ಮ ಸಹೋದ್ಯೋಗಿಯನ್ನೇ ರಕ್ಷಿಸುವ ಬದಲು ಆರೋಪಗಳ ಆಧಾರದ ಮೇಲೆ ವಿಚಾರಣೆ ನಡೆಸುತ್ತಿರುವುದು ಬೇಸರದ ಸಂಗತಿಯಾಗಿದೆ" ಎಂದು ಹೇಳಿದರು.
ಇಂಜಿನಿಯರ್ ಕವಿತಾ ಅವರು ಹಲವು ವರ್ಷಗಳಿಂದ ಜನಪರ ಕೆಲಸಗಳ ಮೂಲಕ ಸಾರ್ವಜನಿಕರ ಮೆಚ್ಚುಗೆ ಗಳಿಸಿದ್ದು, ಅವರ ಸೇವೆಯನ್ನು ಪರಿಗಣಿಸದೆ ಇಲಾಖಾ ಕ್ರಮ ಕೈಗೊಳ್ಳುವುದು ಅಧಿಕಾರಿಗಳ ಮನೋಸ್ಥೈರ್ಯಕ್ಕೆ ಧಕ್ಕೆ ಉಂಟುಮಾಡಬಹುದು ಎಂದು ಅಭಿಪ್ರಾಯಪಟ್ಟರು.
ಪ್ರಕರಣಕ್ಕೆ ಸಂಬಂಧಿಸಿದಂತೆ ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯಾಂಶವನ್ನು ಹೊರತರುವಂತೆ ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ ಅವರು, ಪ್ರಾಮಾಣಿಕ ಅಧಿಕಾರಿಗಳ ರಕ್ಷಣೆಗೆ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.
ಹಾಸನ ಕ್ಷೇತ್ರದ ಶಾಸಕರು ಕೂಡ ಪ್ರಕರಣದ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ನ್ಯಾಯ ಸಿಗದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಜಾನೇಕೆರೆ ಸಾಗರ್ ಎಚ್ಚರಿಕೆ ನೀಡಿದರು.
"ಭ್ರಷ್ಟಾಚಾರವನ್ನು ತಡೆಯಲು ಮುಂದಾಗುವ ಅಧಿಕಾರಿಗಳಿಗೆ ಬೆಂಬಲ ಸಿಗಬೇಕು. ಪ್ರಾಮಾಣಿಕವಾಗಿ ಕೆಲಸ ಮಾಡುವ ಅಧಿಕಾರಿಗಳ ಪರವಾಗಿ ಸರ್ಕಾರ ಮತ್ತು ಸಮಾಜ ನಿಲ್ಲಬೇಕಾಗಿದೆ" ಎಂದು ಅವರು ಹೇಳಿದರು.
PublicNext
17/06/2026 08:45 pm