ಸಕಲೇಶಪುರ: ಮಲೆನಾಡು ಭಾಗದ ಕಾಫಿ ತೋಟಗಳು, ಕೃಷಿ ಜಮೀನುಗಳು ಹಾಗೂ ಖಾಲಿ ಪ್ರದೇಶಗಳಲ್ಲಿ ಕಳೆದ ಕೆಲವು ವರ್ಷಗಳಿಂದ ವೇಗವಾಗಿ ಹರಡುತ್ತಿರುವ ಅಪರಿಚಿತ ಕಳೆ ಸಸಿಯೊಂದು ರೈತರಲ್ಲಿ ಆತಂಕ ಮೂಡಿಸಿದೆ. ಈ ಸಸಿ ನಿಯಂತ್ರಣಕ್ಕೆ ಬಾರದ ರೀತಿಯಲ್ಲಿ ವ್ಯಾಪಿಸುತ್ತಿದ್ದು, ಜಾನುವಾರುಗಳ ಮೇಯುವಿಕೆ, ತೋಟಗಳ ನಿರ್ವಹಣೆ ಹಾಗೂ ಕೃಷಿ ಚಟುವಟಿಕೆಗಳಿಗೆ ತೀವ್ರ ಅಡಚಣೆಯಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಹಾಗೂ ಕೃಷಿಕ ಅವರೇಕಾಡು ಪೃಥ್ವಿ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕಳೆದ ಏಳು ವರ್ಷಗಳಿಂದ ಈ ಸಸಿ ಮಲೆನಾಡಿನ ವಿವಿಧ ಪ್ರದೇಶಗಳಲ್ಲಿ ವೇಗವಾಗಿ ಹರಡುತ್ತಿದ್ದು, ಇದನ್ನು ನಿಯಂತ್ರಿಸಲು ರೈತರು ಹಲವು ರೀತಿಯ ಕೀಟನಾಶಕಗಳು ಹಾಗೂ ಕಳೆನಾಶಕಗಳನ್ನು ಬಳಕೆ ಮಾಡಿದರೂ ನಿರೀಕ್ಷಿತ ಫಲಿತಾಂಶ ದೊರಕಿಲ್ಲ ಎಂದು ಹೇಳಿದರು.
"ಈ ಸಸಿ ತೋಟಗಳ ಮಧ್ಯಭಾಗ, ಬದಿಪ್ರದೇಶಗಳು ಹಾಗೂ ಖಾಲಿ ಜಾಗಗಳಲ್ಲಿ ದಟ್ಟವಾಗಿ ಬೆಳೆಯುತ್ತಿದ್ದು, ಜಾನುವಾರುಗಳು ಮೇಯಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರು ತೋಟಗಳಲ್ಲಿ ಸಂಚರಿಸಲು ಸಹ ತೊಂದರೆ ಅನುಭವಿಸುತ್ತಿದ್ದಾರೆ. ವರ್ಷದಿಂದ ವರ್ಷಕ್ಕೆ ಇದರ ವ್ಯಾಪ್ತಿ ಹೆಚ್ಚುತ್ತಿದ್ದು, ಭವಿಷ್ಯದಲ್ಲಿ ಇದು ಕೃಷಿ ಕ್ಷೇತ್ರಕ್ಕೆ ದೊಡ್ಡ ಸವಾಲಾಗುವ ಸಾಧ್ಯತೆಯಿದೆ" ಎಂದು ಆತಂಕ ವ್ಯಕ್ತಪಡಿಸಿದರು.
ಈ ಸಸ್ಯದ ಮೂಲ, ಬೆಳವಣಿಗೆ ಸ್ವರೂಪ ಹಾಗೂ ನಿಯಂತ್ರಣ ಕ್ರಮಗಳ ಬಗ್ಗೆ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಕೃಷಿ ವಿಜ್ಞಾನ ಕೇಂದ್ರಗಳು ಹಾಗೂ ಸಂಬಂಧಿತ ಸಂಶೋಧನಾ ಸಂಸ್ಥೆಗಳು ವಿಶೇಷ ಅಧ್ಯಯನ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
PublicNext
19/06/2026 02:35 pm
LOADING...