ದಾವಣಗೆರೆ: ಕೊಕ್ಕನೂರು ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಜಯಪ್ಪ (54) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಾಲೆಯ ಸಹ ಶಿಕ್ಷಕರು, ಬಿಸಿಯೂಟದ ಸಿಬ್ಬಂದಿ, ಸಿಆರ್ಪಿ ಹಾಗೂ ಬಿಆರ್ಪಿ ಸೇರಿದಂತೆ ಒಟ್ಟು 11 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಮೃತರ ಪತ್ನಿ ಅಂಜನಮ್ಮ ನೀಡಿದ ದೂರಿನ ಮೇರೆಗೆ ಮಲೇಬೆನ್ನೂರು ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.
ಹರಿಹರ ತಾಲೂಕಿನ ಕೊಕ್ಕನೂರು ಸರ್ಕಾರಿ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಜಯಪ್ಪ, ಮಾನಸಿಕ ಕಿರುಕುಳ ಹಾಗೂ ಜಾತಿನಿಂದನೆಯ ಕಾರಣಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಮಾನಸಿಕ ಕಿರುಕುಳ ಹಾಗೂ ಜಾತಿನಿಂದನೆ ಆರೋಪದಡಿ ಸಿಆರ್ಪಿ, ಬಿಆರ್ಪಿ, ಸಹ ಶಿಕ್ಷಕರಾದ ಶ್ರೀಕಾಂತಚಾರಿ, ವೆಂಕಟೇಶ್, ರಂಜನಿ, ಚೇತನಾ, ಮಹಾಂತೇಶ್ ಗೌಳಿ ಹಾಗೂ ಅಡುಗೆ ಸಹಾಯಕರಾದ ಸುಮಾ, ಚೆನ್ನಮ್ಮ, ರೂಪಾ, ವಿಜಯಮ್ಮ ಸೇರಿದಂತೆ 11 ಮಂದಿ ವಿರುದ್ಧ ಎಫ್ಐಆರ್ ಆಗಿದೆ.
ಪ್ರಕರಣ ದಾಖಲಾಗುತ್ತಿದ್ದಂತೆ, ಬಂಧನದ ಭೀತಿಯಿಂದ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಹ ಶಿಕ್ಷಕರು ತಲೆಮರೆಸಿಕೊಂಡಿದ್ದಾರೆ. ಇದರಿಂದ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ತೊಂದರೆಯಾಗದಂತೆ, ತಾತ್ಕಾಲಿಕವಾಗಿ ಅನುದಾನಿತ ಶಾಲಾ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಗ್ರಾಮದಲ್ಲಿ ಶಾಂತಿ ಕದಡದಂತೆ ಪೊಲೀಸರು ಗ್ರಾಮಸ್ಥರೊಂದಿಗೆ ಸಭೆ ನಡೆಸಿ, ಶಾಂತಿಯುತವಾಗಿ ನಡೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ.
PublicNext
19/06/2026 03:03 pm