ರಬಕವಿ-ಬನಹಟ್ಟಿ : ಮಹಾಲಿಂಗಪೂರ ಪಟ್ಟಣದಲ್ಲಿ 46ನೇ ರೈತ ಹುತಾತ್ಮ ದಿನಾಚರಣೆ ಅಂಗವಾಗಿ ರೈತ ಸಂಘ, ಹಸಿರು ಸೇನೆ ಮತ್ತು ತಾಲೂಕು ಹೋರಾಟ ಸಮಿತಿ ಆಶ್ರಯದಲ್ಲಿ ಹೋರಾಟದ ಬೃಹತ್ ಕಾರ್ಯಕ್ರಮ ನಡೆಯಿತು.
ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ ಕೋಡಿಹಳ್ಳಿ ಮಾತನಾಡಿ, ರಾಜ್ಯ ಸರ್ಕಾರ ಬರ ಘೋಷಣೆ ಮಾಡಿದ್ದರೂ ವಿಮೆ ಕಂಪನಿಯವರು ರೈತರಿಗೆ ಟೋಪಿ ಹಾಕುವ ಕೆಲಸ ಮಾಡುತ್ತಿದ್ದು ಅಂತಹ ಘಟನೆಗಳ ಮೇಲೆ ಪ್ರಕರಣ ದಾಖಲಿಸುವ ಎಚ್ಚರಿಕೆ ನೀಡಿದರು. ಸುದೀರ್ಘವಾಗಿ ನಡೆದುಬಂದ ತಾಲೂಕು ಹೋರಾಟಕ್ಕೆ ರೈತ ಸಂಘದ ಬೆಂಬಲವಿದೆ ಎಂದರು.
ರೈತರ ವಿವಿಧ ಸಮಸ್ಯೆಗಳ ಕುರಿತಂತೆ ರೈತ ಮುಖಂಡರು ಮಾತನಾಡಿದರು. ರೈತ ಸಂಘದ ಜಿಲ್ಲಾಧ್ಯಕ್ಷ ಬಸವಂತಪ್ಪ ಕಾಂಬಳೆ, ಸುಭಾಸ ಶಿರಬೂರ, ಗಂಗಾಧರ ಮೇಟಿ, ತಾಲೂಕು ಹೋರಾಟ ಸಮಿತಿ ಅಧ್ಯಕ್ಷ ಸಂಗಪ್ಪ ಹಲ್ಲಿ ಸೇರಿದಂತೆ ರಾಜ್ಯದ ಮತ್ತು ಜಿಲ್ಲೆಯ ರೈತ ಮುಖಂಡರು ಹಾಗೂ ತಾಲೂಕು ಹೋರಾಟ ಸಮಿತಿಯ ಪದಾಧಿಕಾರಿಗಳು ಇದ್ದರು.
ಇದೇ ಸಂದರ್ಭದಲ್ಲಿ ಮನವಿ ಸ್ವೀಕರಿಸಿದ ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬಿಡಿಕರ ಮಾತನಾಡಿ, ತಮ್ಮ ಎಲ್ಲಾ ಬೇಡಿಕೆಗಳನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಕಳುಹಿಸಲಾಗುವುದು ಎಂದರು. ರೈತಾಪಿ ಜನರು ಹೋರಾಟಕ್ಕೆ ಸಾವಿರಾರು ಸಂಖ್ಯೆಯಲ್ಲಿ ಹರಿದುಬಂದಿದ್ದರು.
PublicNext
22/07/2026 12:28 pm
LOADING...