ಸಕಲೇಶಪುರ: ಗ್ರಾಮೀಣ ಪ್ರದೇಶದ ಮೂಲಸೌಕರ್ಯ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ, ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಎತ್ತಿನಹೊಳೆ ಯೋಜನೆಯಡಿಯಲ್ಲಿ ₹1.30 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಸಕಲೇಶಪುರ ತಾಲೂಕಿನ ಹೆಬ್ಬಸಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಜ್ಜಿಗುಡ್ಡೆ–ಡಾ. ಸುಧಾಕರ್ ಮನೆ ಕಡೆಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.
ಸುಮಾರು 1.6 ಕಿಲೋಮೀಟರ್ ಉದ್ದದ ಈ ರಸ್ತೆ ಹಲವು ವರ್ಷಗಳಿಂದ ಸಂಪೂರ್ಣ ಹದಗೆಟ್ಟು ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿತ್ತು. ಪ್ರತಿದಿನ ಶಾಲಾ–ಕಾಲೇಜು ವಿದ್ಯಾರ್ಥಿಗಳು, ರೈತರು, ಕಾರ್ಮಿಕರು ಹಾಗೂ ವಾಹನ ಸವಾರರು ಇದೇ ರಸ್ತೆಯನ್ನು ಅವಲಂಬಿಸಿದ್ದು, ಮಳೆಗಾಲದಲ್ಲಿ ಸಂಚಾರ ಮತ್ತಷ್ಟು ದುಸ್ತರವಾಗುತ್ತಿತ್ತು.
ಗ್ರಾಮಸ್ಥರು ಹಲವು ಬಾರಿ ರಸ್ತೆ ಅಭಿವೃದ್ಧಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ, ತಾಲೂಕು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಭಾಸ್ಕರ್ ಹಾನುಬಾಳು ಅವರು ಸರ್ಕಾರದ ಗಮನಕ್ಕೆ ವಿಷಯವನ್ನು ತಂದು, ಸುಮಾರು ₹1.30 ಕೋಟಿ ಅನುದಾನ ಮಂಜೂರು ಮಾಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ರಸ್ತೆ ನಿರ್ಮಾಣದ ಜೊತೆಗೆ ಹಾನುಬಾಳು ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳ ರಸ್ತೆ ಅಭಿವೃದ್ಧಿ ಹಾಗೂ ಸರ್ಕಾರಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಸರ್ಕಾರದಿಂದ ಅನುದಾನ ತರಿಸಿ ಅಭಿವೃದ್ಧಿ ಕಾರ್ಯಗಳಿಗೆ ಶ್ರಮಿಸಿರುವ ಭಾಸ್ಕರ್ ಹಾನುಬಾಳು ಅವರನ್ನು ಗ್ರಾಮಸ್ಥರು ಇದೇ ಸಂದರ್ಭದಲ್ಲಿ ಗೌರವಿಸಿ ಸನ್ಮಾನಿಸಿದರು.
ಕಾಮಗಾರಿ ಪೂರ್ಣಗೊಂಡ ಬಳಿಕ ಈ ಭಾಗದ ನೂರಾರು ಕುಟುಂಬಗಳಿಗೆ ಸುಗಮ ಸಂಚಾರದ ಸೌಲಭ್ಯ ದೊರೆಯಲಿದ್ದು, ಕೃಷಿ ಚಟುವಟಿಕೆ, ಶಿಕ್ಷಣ ಹಾಗೂ ದೈನಂದಿನ ಸಂಚಾರಕ್ಕೆ ಹೊಸ ಚೈತನ್ಯ ಸಿಗಲಿದೆ ಎಂದು ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದರು.
ಈ ಕಾರ್ಯಕ್ರಮದಲ್ಲಿ ಸಕಲೇಶಪುರ ಶಾಸಕ 'ಸಿಮೆಂಟ್' ಮಂಜುನಾಥ್, ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷ ಡಿ.ಸಿ. ಸಣ್ಣಸ್ವಾಮಿ, ಕಾಂಗ್ರೆಸ್ ಮುಖಂಡ ತುಳಸಿ ಪ್ರಸಾದ್, ಹೆಬ್ಬಸಲೆ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ವೆಂಕಟೇಶ್ ಹೆನ್ನಲಿ, ಮಾಜಿ ಅಧ್ಯಕ್ಷ ಮಹೇಶ್, ಮೇಘರಾಜು, ಕೌಶಿಕ್ ಹೆನ್ನಲಿ, ರಮೇಶ್ ಹಾರ್ಲೆಕುಡಿಗೆ ಸೇರಿದಂತೆ ಕಾಂಗ್ರೆಸ್ ಮುಖಂಡರು, ಗ್ರಾಮಸ್ಥರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
Kshetra Samachara
22/07/2026 05:17 pm