ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ರಸ್ತೆ ಸಂಪೂರ್ಣ ಗುಂಡಿಗಳಿಂದ ಕೂಡಿದ್ದು, ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆಯಾಗಿತ್ತು. ಹಲವು ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಸ್ವಂತ ವೆಚ್ಚದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ.
ದಾವಣಗೆರೆ ನಗರದ ಪ್ರಮುಖ ಸಂಪರ್ಕ ರಸ್ತೆಯಾದ ಜಯದೇವ ವೃತ್ತವು ಕಳೆದ ಹಲವು ದಿನಗಳಿಂದ ದೊಡ್ಡ ದೊಡ್ಡ ಗುಂಡಿಗಳಿಂದ ಕೂಡಿದ್ದು, ವಾಹನ ಸವಾರರಿಗೆ ನಿತ್ಯದ ಸಂಕಷ್ಟವಾಗಿತ್ತು.
ಈ ರಸ್ತೆಯಲ್ಲಿ ಪ್ರತಿದಿನ ಆ್ಯಂಬುಲೆನ್ಸ್ಗಳು, ಶಾಲಾ-ಕಾಲೇಜು ವಾಹನಗಳು, ನಗರ ಹಾಗೂ ಗ್ರಾಮಾಂತರ ಪ್ರದೇಶಗಳಿಗೆ ಸಂಚರಿಸುವ ಬಸ್ಗಳು, ವಿವಿಧ ಇಲಾಖೆಗಳ ವಾಹನಗಳು ಸೇರಿದಂತೆ ಸಾವಿರಾರು ವಾಹನಗಳು ಓಡಾಡುತ್ತಿವೆ. ಗುಂಡಿಗಳಿಂದಾಗಿ ಈ ಹಿಂದೆ ಹಲವು ಅಪಘಾತಗಳು ಸಂಭವಿಸಿದ್ದು, ಸಾರ್ವಜನಿಕರು ಆತಂಕದ ನಡುವೆಯೇ ಸಂಚರಿಸುತ್ತಿದ್ದರು.
ರಸ್ತೆ ದುರಸ್ತಿಗೆ ಲೋಕೋಪಯೋಗಿ ಇಲಾಖೆ ಹಾಗೂ ನಗರ ಪಾಲಿಕೆಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ, ವಿಶ್ವ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಕೆ. ಜಿ. ಯಲ್ಲಪ್ಪ ಅವರ ನೇತೃತ್ವದಲ್ಲಿ ತಡರಾತ್ರಿ ಸಂಘಟನೆಯ ಪದಾಧಿಕಾರಿಗಳು ತಮ್ಮ ಸ್ವಂತ ವೆಚ್ಚದಲ್ಲಿ ಸಿಮೆಂಟ್ ಬಳಸಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಕೈಗೊಂಡಿದ್ದಾರೆ.
PublicNext
23/07/2026 11:23 am