ಹಿರಿಯೂರು: ಚಿತ್ರದುರ್ಗದಲ್ಲಿ ನಡೆಯುತ್ತಿರುವ ಬೆಂಗಳೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಬರ ಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆ, ಸರ್ಕಾರಿ ಶಾಲೆಗಳ ಅಭಿವೃದ್ಧಿ, ಸಚಿವ ಸಂಪುಟ ವಿಸ್ತರಣೆ ಹಾಗೂ ಬಿಜೆಪಿ ವಿರುದ್ಧ ಹಲವು ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ.
ರಾಜ್ಯದಲ್ಲಿ ಆಲಮಟ್ಟಿ ಭಾಗವನ್ನು ಹೊರತುಪಡಿಸಿದರೆ ಬಹುತೇಕ ಎಲ್ಲೆಡೆ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರಿಗೆ ಹಾಗೂ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಸರ್ಕಾರ ಈಗಾಗಲೇ ಅಗತ್ಯ ಕ್ರಮ ಕೈಗೊಂಡಿದೆ. ಅಧಿಕಾರಿಗಳಿಂದ ಬರದ ಕುರಿತು ಸಂಪೂರ್ಣ ಮಾಹಿತಿ ಪಡೆದಿದ್ದು, ಮುಂದಿನ ಸಭೆಗಳಲ್ಲಿ ಮತ್ತಷ್ಟು ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.
ಸರ್ಕಾರಿ ಶಾಲೆಗಳ ಅಭಿವೃದ್ಧಿ ಕುರಿತು ಮಾತನಾಡಿದ ಅವರು, ಎಲ್ಲಾ ಖಾಸಗಿ ಶಾಲೆಗಳಲ್ಲ, ಉತ್ತಮ ಶಿಕ್ಷಣ ನೀಡುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು ಹಾಗೂ ದೊಡ್ಡ ಉದ್ಯಮಿಗಳು ಸಿಎಸ್ಆರ್ (CSR) ನಿಧಿಯ ಮೂಲಕ ಸರ್ಕಾರಿ ಶಾಲೆಗಳನ್ನು ದತ್ತು ಪಡೆಯಬೇಕು ಎಂದು ಕರೆ ನೀಡಿದರು.
ಹಳ್ಳಿ ಮಕ್ಕಳಿಗೂ ಬೆಂಗಳೂರು ಮಟ್ಟದ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬುದು ಸರ್ಕಾರದ ಗುರಿಯಾಗಿದೆ ಎಂದರು.
ಒಬ್ಬ ವಿದ್ಯಾರ್ಥಿಗೆ ಸರ್ಕಾರ ವರ್ಷಕ್ಕೆ ಸುಮಾರು ₹1.40 ಲಕ್ಷ ವೆಚ್ಚ ಮಾಡುತ್ತಿದ್ದರೂ ನಿರೀಕ್ಷಿತ ಮಟ್ಟದ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಖಾಸಗಿ ವಲಯದ ಸಹಭಾಗಿತ್ವ ಅಗತ್ಯ ಎಂದು ಹೇಳಿದರು.
ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಡಿ. ಕೆ. ಶಿವಕುಮಾರ್, "ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ" ಎಂದು ಸ್ಪಷ್ಟಪಡಿಸಿದರು.
ನೀಟ್ ಹಾಗೂ ಇತರ ವಿಚಾರಗಳಲ್ಲಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಅವರು, ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ವ್ಯಕ್ತವಾಗುತ್ತಿದೆ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಸಹಜ. ನನ್ನ ವಿರುದ್ಧವೂ ಹಿಂದೆ ಪ್ರತಿಭಟನೆಗಳು ನಡೆದಿವೆ. ಆದರೆ ಬಿಜೆಪಿ ತನ್ನ ನಾಯಕರಿಂದ ರಾಜೀನಾಮೆ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
ಬಿಡದಿ ರೈತರ ವಿರುದ್ಧ ದಾಖಲಾಗಿರುವ ಎಫ್ಐಆರ್ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ, "ಎಲ್ಲರೂ ನಮ್ಮ ರೈತರೇ. ಯಾರ ಮೇಲೂ ಒತ್ತಡ ಅಥವಾ ಕಿರುಕುಳ ಇರುವುದಿಲ್ಲ. ಈ ವಿಚಾರದಲ್ಲಿ ಅಂತಿಮ ತೀರ್ಮಾನವನ್ನು ನಾನು ತೆಗೆದುಕೊಳ್ಳುತ್ತೇನೆ" ಎಂದು ತಿಳಿಸಿದರು.
PublicNext
25/07/2026 02:28 pm