ಸಕಲೇಶಪುರ (ಹಾಸನ): ಸಕಲೇಶಪುರ ತಾಲ್ಲೂಕಿನಲ್ಲಿ ಕಾಡಾನೆಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶಾಂತಪುರ ಗ್ರಾಮದ ರೈತ ಮಲ್ಲೇಶ್ ಅವರು ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಗಾಯಾಳು ಮಲ್ಲೇಶ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಶಾಸಕ ಸಿಮೆಂಟ್ ಮಂಜು, ಕಾಡಾನೆ ಹಾವಳಿ ನಿಯಂತ್ರಣಕ್ಕೆ ತುರ್ತು ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ವೇಳೆ ದೂರವಾಣಿ ಮೂಲಕ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, "ಗ್ರಾಮಗಳಿಗೆ ನಿರಂತರವಾಗಿ ನುಗ್ಗಿ ಜನರ ಜೀವಕ್ಕೆ ಅಪಾಯ ಉಂಟುಮಾಡುತ್ತಿರುವ ಒಂಟಿ ಕಾಡಾನೆಗಳನ್ನು ತಕ್ಷಣ ಗುರುತಿಸಿ ರೇಡಿಯೋ ಕಾಲರ್ ಅಳವಡಿಸಬೇಕು" ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ರೇಡಿಯೋ ಕಾಲರ್ ಅಳವಡಿಸುವ ಮೂಲಕ ಕಾಡಾನೆಗಳ ಚಲನವಲನದ ಮೇಲೆ ನಿಗಾ ವಹಿಸಿ, ಗ್ರಾಮಸ್ಥರಿಗೆ ಮುಂಚಿತವಾಗಿ ಎಚ್ಚರಿಕೆ ನೀಡಲು ಸಾಧ್ಯವಾಗುತ್ತದೆ. ಇದರಿಂದ ಮಾನವ-ಆನೆ ಸಂಘರ್ಷವನ್ನು ಕಡಿಮೆ ಮಾಡಿ, ರೈತರ ಜೀವ ಹಾಗೂ ಆಸ್ತಿಪಾಸ್ತಿಯನ್ನು ರಕ್ಷಿಸಲು ನೆರವಾಗಲಿದೆ ಎಂದು ಶಾಸಕರು ಅಭಿಪ್ರಾಯಪಟ್ಟರು.
ಸಕಲೇಶಪುರ ಭಾಗದಲ್ಲಿ ಕಾಡಾನೆಗಳ ಹಾವಳಿ ನಿರಂತರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯು ಶಾಶ್ವತ ಪರಿಹಾರದತ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
PublicNext
29/07/2026 04:49 pm
LOADING...