ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ನಗರದ ಪಾವಗಡ ರಸ್ತೆಯಲ್ಲಿರುವ ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿ, ಆದರ್ಶ ಶಾಲೆ, ಮೊರಾರ್ಜಿ ವಸತಿ ಶಾಲೆ, ಸರ್ಕಾರಿ ಐಟಿಐ ಕಾಲೇಜು ಹಾಗೂ ವಿದ್ಯಾರ್ಥಿ ವಸತಿ ನಿಲಯಗಳ ಸುತ್ತಮುತ್ತ ಅಕ್ರಮ ಪೆಟ್ಟಿಗೆ ಅಂಗಡಿಗಳ ಹಾವಳಿ ಮಿತಿ ಮೀರಿದೆ ಎಂಬ ಆರೋಪ ಕೇಳಿಬಂದಿದೆ.
ಈ ಅಂಗಡಿಗಳಲ್ಲಿ ಎಗ್ಗ್ ರೈಸ್ ಜೊತೆಗೆ ಗುಟ್ಕಾ, ಸಿಗರೇಟ್ ಹಾಗೂ ವಿವಿಧ ತಂಬಾಕು ಉತ್ಪನ್ನಗಳನ್ನು ಬಹಿರಂಗವಾಗಿ ಮಾರಾಟ ಮಾಡಲಾಗುತ್ತಿದ್ದು, ವಿದ್ಯಾರ್ಥಿಗಳು ತಂಬಾಕು ವ್ಯಸನದತ್ತ ಆಕರ್ಷಿತರಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಪರಿಸ್ಥಿತಿಯ ಗಂಭೀರತೆಯನ್ನು ತೋರಿಸುವಂತೆ, ಆದರ್ಶ ಶಾಲೆಯ ವಿದ್ಯಾರ್ಥಿಯೊಬ್ಬನ ತಂದೆ ಪೊಲೀಸ್ ಇಲಾಖೆಗೆ ದೂರು ನೀಡಿದ ಬಳಿಕ ತಮ್ಮ ಮಗನನ್ನು ಶಾಲೆಯಿಂದ ಬಿಡಿಸಿ ಬೇರೆ ಶಾಲೆಗೆ ಸೇರಿಸಿರುವ ಘಟನೆ ಕೂಡ ಬೆಳಕಿಗೆ ಬಂದಿದೆ.
ಈ ಹಿಂದೆ ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಕ್ರಮ ಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ವಿಧಿಸಿದ್ದರೂ, ಕೆಲವೇ ದಿನಗಳಲ್ಲಿ ಮತ್ತೆ ತಂಬಾಕು ಉತ್ಪನ್ನಗಳ ಮಾರಾಟ ಆರಂಭವಾಗಿದೆ ಎನ್ನಲಾಗಿದೆ. ಶಾಲೆ, ಕಾಲೇಜು, ವಿದ್ಯಾರ್ಥಿ ನಿಲಯ ಹಾಗೂ ಸಾರ್ವಜನಿಕ ಸ್ಥಳಗಳ ಸಮೀಪ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ನಿಷೇಧವಿದ್ದರು ಸಹ ನಿಯಮಗಳನ್ನು ಬಹಿರಂಗವಾಗಿ ಉಲ್ಲಂಘಿಸಲಾಗುತ್ತಿದೆ ಎಂಬ ಆರೋಪಗಳಿವೆ.
ಇದನ್ನು ಕಂಡೂ ಸಂಬಂಧಪಟ್ಟ ಅಧಿಕಾರಿಗಳು ಮೌನ ವಹಿಸಿರುವುದು ಸಾರ್ವಜನಿಕರ ಅನುಮಾನಕ್ಕೆ ಕಾರಣವಾಗಿದ್ದು, ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ಅಕ್ರಮ ಅಂಗಡಿಗಳನ್ನು ಶಾಶ್ವತವಾಗಿ ತೆರವುಗೊಳಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
PublicNext
29/07/2026 06:46 pm
LOADING...