ಹಾನಗಲ್: ಹಾನಗಲ್ ಪಟ್ಟಣದಲ್ಲಿ ತಡಸ್ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಪೈಪ್ಲೈನ್ ಅಳವಡಿಕೆಗಾಗಿ ಶಿವಮೊಗ್ಗ–ಹುಬ್ಬಳ್ಳಿ ರಾಜ್ಯ ಹೆದ್ದಾರಿ, SH-1 ರಸ್ತೆಯನ್ನು ಅಗೆದು ಕಾಮಗಾರಿ ನಡೆಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಪಟ್ಟಣದ ಸಾರಿಗೆ ಘಟಕದ ಎದುರು ಸಾಂವಸಗಿ ಕಡೆಯಿಂದ ಆರಂಭವಾದ ಕಾಮಗಾರಿ, ಸಾರಿಗೆ ಘಟಕದಿಂದ ಎಪಿಎಂಸಿ ವೇಬ್ರಿಡ್ಜ್ವರೆಗೆ ಸಾಗುತ್ತಿದ್ದು, ಕಳೆದ ಎರಡು ದಿನಗಳಿಂದ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ. ಭಾರೀ ವಾಹನಗಳು, ಶಾಲಾ ವಾಹನಗಳು, ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ಅಪಾಯದ ನಡುವೆ ಸಂಚರಿಸುವಂತಾಗಿದೆ.
ಲೋಕೋಪಯೋಗಿ ಇಲಾಖೆಯ ಅಗತ್ಯ ಅನುಮತಿ, ರೈಟ್ ಆಫ್ ವೇ (ROW), ರಸ್ತೆ ಅಗೆತ ಪರವಾನಗಿ ಹಾಗೂ NOC ಇಲ್ಲದೇ ಕಾಮಗಾರಿ ನಡೆಸಲಾಗುತ್ತಿದೆ. ಜೊತೆಗೆ, ಕಾಮಗಾರಿ ಸ್ಥಳದಲ್ಲಿ ಸುರಕ್ಷತಾ ಬ್ಯಾರಿಕೇಡ್, ಎಚ್ಚರಿಕೆ ಫಲಕಗಳು ಮತ್ತು ರಾತ್ರಿ ವೇಳೆ ಎಚ್ಚರಿಕೆ ದೀಪಗಳ ಸಮರ್ಪಕ ವ್ಯವಸ್ಥೆಯೂ ಇಲ್ಲ ಎನ್ನಲಾಗಿದೆ.
ಯಾವುದೇ ಕ್ಷಣದಲ್ಲಿ ಅಪಘಾತ ಸಂಭವಿಸುವ ಸಾಧ್ಯತೆ ಇರುವುದರಿಂದ, ಲೋಕೋಪಯೋಗಿ ಇಲಾಖೆ ತಕ್ಷಣ ಸ್ಥಳ ಪರಿಶೀಲನೆ ನಡೆಸಿ, ಕಾಮಗಾರಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಬೇಕು. ನಿಯಮ ಉಲ್ಲಂಘನೆ ಕಂಡುಬಂದರೆ ಸಂಬಂಧಪಟ್ಟ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
-ಲೋಕೇಶ್ ಸುಣಗಾರ್, ಪಬ್ಲಿಕ್ ನೆಕ್ಸ್ಟ್ ಹಾನಗಲ್
PublicNext
29/07/2026 10:35 pm
LOADING...