ಶಿವಮೊಗ್ಗ : ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ತಲೆದೋರಿದ್ದು, ಶಾಸಕ ಸುನಿಲ್ ಕುಮಾರ್ ನೇತೃತ್ವದ ಬಿಜೆಪಿ ಬರ ಅಧ್ಯಯನ ಸಮಿತಿಯು ಗುರುವಾರ ಶಿವಮೊಗ್ಗ ತಾಲೂಕಿನ ತ್ಯಾಜುವಳ್ಳಿ ಹಾಗೂ ಚಾಮೇನಹಳ್ಳಿ ಸೇರಿ ಹಲವು ಗ್ರಾಮಗಳಿಗೆ ಭೇಟಿ ನೀಡಿ ವಸ್ತುಸ್ಥಿತಿ ಪರಿಶೀಲನೆ ನಡೆಸಿತು.
ಸ್ಥಳೀಯ ರೈತರಿಂದ ನೇರವಾಗಿ ಅಹವಾಲು ಸ್ವೀಕರಿಸಿದ ಸಮಿತಿ ಸದಸ್ಯರು, ಗ್ರಾಮಗಳ ಪ್ರಮುಖ ಕೆರೆಗಳು ಹಾಗೂ ಒಣಗಿ ಹೋದ ಬೆಳೆ ಹಾನಿ ಪ್ರದೇಶಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದರು. ಆಕ್ರೋಶ ಹೊರಹಾಕಿದ ರೈತರು, "ಹಗಲಿನ ವೇಳೆ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಇದರಿಂದಾಗಿ ಡ್ರಿಪ್ ನೀರಾವರಿ ನಿರ್ವಹಣೆ ಮಾಡಲು ತೀವ್ರ ತೊಂದರೆಯಾಗುತ್ತಿದೆ.
ಸರ್ಕಾರ ರಾತ್ರಿ ವೇಳೆಯಲ್ಲಿ ಮಾತ್ರ ವಿದ್ಯುತ್ ನೀಡುತ್ತಿದ್ದು, ಹಾವು ಹಾಗೂ ಕಾಡುಪ್ರಾಣಿಗಳ ಹಾವಳಿಯಿಂದಾಗಿ ರಾತ್ರಿ ಹೊತ್ತು ಹೊಲಗಳಿಗೆ ತೆರಳಲು ಭಯವಾಗುತ್ತಿದೆ" ಎಂದು ತಮ್ಮ ಅಳಲನ್ನು ತೋಡಿಕೊಂಡರು.
ಹಾರನಹಳ್ಳಿ ಹೋಬಳಿ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತೀವ್ರ ಅಭಾವ ಸೃಷ್ಟಿಯಾಗಿದೆ. ಗ್ರಾಮಗಳ ಪ್ರಮುಖ ಕೆರೆ-ಕಟ್ಟೆಗಳು ಸಂಪೂರ್ಣವಾಗಿ ಬರಿದಾಗಿದ್ದು, ಗ್ರಾಮಸ್ಥರಿಗಷ್ಟೇ ಅಲ್ಲದೆ ದನ-ಕರುಗಳು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಸಿಗದೆ ಪರದಾಡುವಂತಾಗಿದೆ.
ಮಳೆಯ ಅಭಾವದಿಂದಾಗಿ ಪ್ರದೇಶದ ಪ್ರಮುಖ ಬೆಳೆಗಳಾದ ಮೆಕ್ಕೆಜೋಳ, ಅಡಿಕೆ, ಶುಂಠಿ ಹಾಗೂ ಜೋಳ ಸಂಪೂರ್ಣವಾಗಿ ಹಾನಿಗೊಳಗಾಗಿವೆ. ಲಕ್ಷಾಂತರ ರೂಪಾಯಿ ಸಾಲ ಮಾಡಿ ಬೆಳೆದ ಬೆಳೆಗಳು ಕೈಗೆ ಸಿಗದಂತಾಗಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ತಕ್ಷಣವೇ ಎಚ್ಚೆತ್ತುಕೊಂಡು ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ಧನ ಬಿಡುಗಡೆ ಮಾಡಬೇಕು ಎಂದು ರೈತರು ಬಿಜೆಪಿ ನಾಯಕರಿಗೆ ಮನವಿ ಮಾಡಿದರು.
PublicNext
30/07/2026 04:08 pm
LOADING...