ಶಿರಹಟ್ಟಿ: ಪಟ್ಟಣ ಪಂಚಾಯತಿ ಕಚೇರಿಯಲ್ಲಿ ಅನಧಿಕೃತ ಕೆಲಸಗಾರರು ಹಾಗೂ ಮಧ್ಯವರ್ತಿಗಳ (ಏಜೆಂಟರ) ಹಾವಳಿ ಹೆಚ್ಚಾಗಿದೆ ಎಂಬ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ, ಶಿರಹಟ್ಟಿ ಪಟ್ಟಣ ಪಂಚಾಯತಿಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ದಾಖಲೆಗಳು ಹಾಗೂ ಸಿಬ್ಬಂದಿಯ ವಿವರಗಳನ್ನು ತೀವ್ರ ಪರಿಶೀಲನೆಗೆ ಒಳಪಡಿಸಿದ್ದಾರೆ.
ಗುರುವಾರ ಬೆಳಿಗ್ಗೆ ದಿಢೀರನೆ ಪಟ್ಟಣ ಪಂಚಾಯತಿ ಕಚೇರಿಗೆ ಭೇಟಿ ನೀಡಿದ ಲೋಕಾಯುಕ್ತ ಅಧಿಕಾರಿಗಳ ತಂಡವು ಕಚೇರಿಯ ಮುಖ್ಯ ಬಾಗಿಲುಗಳನ್ನು ಬಂದ್ ಮಾಡಿ ತನಿಖೆ ಆರಂಭಿಸಿತು. ಕಚೇರಿಯಲ್ಲಿ ಹಾಜರಿದ್ದ ಪ್ರತಿಯೊಬ್ಬ ಸಿಬ್ಬಂದಿಯ ಹಾಜರಾತಿ ಪುಸ್ತಕ, ಅಧಿಕೃತ ಕೆಲಸಗಾರರ ಪಟ್ಟಿ ಹಾಗೂ ಕಡತಗಳನ್ನು ಕೂಲಂಕುಷವಾಗಿ ಪರಿಶೀಲಿಸಿತು.
ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಮಧ್ಯವರ್ತಿಗಳು ಮತ್ತು ಅನಧಿಕೃತ ವ್ಯಕ್ತಿಗಳು ಕಚೇರಿಯ ಒಳಗಡೆ ಕುಳಿತು ಹಣ ವಸೂಲಿ ಮಾಡುತ್ತಿದ್ದಾರೆ ಹಾಗೂ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು. ಈ ದೂರುಗಳ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಕಚೇರಿಯಲ್ಲಿದ್ದ ಸಿಬ್ಬಂದಿಗಳ ಮಾಹಿತಿಯನ್ನು ಪಡೆದುಕೊಂಡು ಅಕ್ರಮವಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಗಳ
ಕುರಿತು ವಿಚಾರಣೆ ನಡೆಸಿದರು.
ಲೋಕಾಯುಕ್ತ ದಾಳಿಯ ಸುದ್ದಿ ತಿಳಿಯುತ್ತಿದ್ದಂತೆ ಕಚೇರಿಯಲ್ಲಿದ್ದ ಕೆಲವು ಮಧ್ಯವರ್ತಿಗಳು ಕಾಲ್ಕಿತ್ತಿದ್ದು, ದಾಳಿಯಿಂದಾಗಿ ಪಟ್ಟಣ ಪಂಚಾಯತಿ ಸಿಬ್ಬಂದಿ ಹಾಗೂ ಸಾರ್ವಜನಿಕ ವಲಯದಲ್ಲಿ ಭಾರಿ ಸಂಚಲನ ಮೂಡಿದೆ.
PublicNext
30/07/2026 05:30 pm
LOADING...