ಹೊಸಪೇಟೆ: ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹೃದಯ ಭಾಗದಲ್ಲಿರುವ ಅನಂತಶಯನಗುಡಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಸ್ತುತ ನಡೆಯುತ್ತಿರುವ ಕಾಂಕ್ರೀಟ್, ಸೆಂಟರಿಂಗ್ ಹಾಗೂ ಪಾದಚಾರಿ ಮತ್ತು ವಾಹನ ಸಂಚಾರಕ್ಕೆ ಸಂಬಂಧಿಸಿದ ನಿರ್ಮಾಣ ಕಾಮಗಾರಿಗಳ ಪ್ರಗತಿಯನ್ನು ವೀಕ್ಷಿಸಿದ ಅವರು, ಈ ಮಾರ್ಗದಲ್ಲಿ ದಿನನಿತ್ಯ ಸಾವಿರಾರು ವಾಹನಗಳು ಹಾಗೂ ಸಾರ್ವಜನಿಕರು ಸಂಚರಿಸುತ್ತಿದ್ದು, ಕಾಮಗಾರಿ ನಡೆಯುತ್ತಿರುವುದರಿಂದ ಉಂಟಾಗುತ್ತಿರುವ ಸಂಚಾರ ಅಡಚಣೆಗೆ ಕಾಮಗಾರಿ ಸ್ಥಳದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಕಾಮಗಾರಿಗೆ ವೇಗ ನೀಡಲು ನಿರ್ದೇಶಿಸಿದರು.
ಸಾರ್ವಜನಿಕರು ಹಾಗೂ ವಾಹನ ಸವಾರರ ಅನುಕೂಲಕ್ಕಾಗಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ಯಾವುದೇ ವಿಳಂಬವಿಲ್ಲದೆ ತ್ವರಿತವಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಎಂಜಿನಿಯರ್ಗಳು ಹಾಗೂ ಗುತ್ತಿಗೆದಾರರಿಗೆ ತಾಕೀತು ಮಾಡಿದರು. ನಿರ್ಮಾಣ ಕಾರ್ಯದಲ್ಲಿ ಯಾವುದೇ ರೀತಿಯ ತಾಂತ್ರಿಕ ಲೋಪಗಳಾಗದಂತೆ ಅತ್ಯುನ್ನತ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ಪ್ರತಿ ಹಂತದ ಕಾಂಕ್ರೀಟ್ ಸಾಮರ್ಥ್ಯ ಪರಿಶೀಲಿಸಿ, ನಿಗದಿತ ಕಾಲಮಿತಿಯೊಳಗೆ ಮೇಲ್ಸೇತುವೆಯನ್ನು ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ್, ಪ್ರಾದೇಶಿಕ ಸಾರಿಗೆ ಅಧಿಕಾರಿ ದಾಮೋದರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮನೋಹರ್, ಲೋಕೋಪಯೋಗಿ ಇಲಾಖೆಯ ಅಭಿಯಂತರರು ಸೇರಿದಂತೆ ಇತರರು ಉಪಸ್ಥಿತರಿದ್ದರು.
PublicNext
30/07/2026 10:49 pm
LOADING...