ಬೀದರ್: ರಾಜ್ಯದ ಎಲ್ಲ ಜಿಲ್ಲಾ ಪಂಚಾಯತಿಗಳ ಕಾರ್ಯನಿರ್ವಹಣಾಧಿಕಾರಿಗಳು ವಾರದಲ್ಲಿ ಕನಿಷ್ಠ 2-3 ಗ್ರಾಮ ಪಂಚಾಯಿತಿ ಕಚೇರಿಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿ, ಪರಿಹರಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.
ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಇಂದು ಮುಖ್ಯ ಕಾರ್ಯದರ್ಶಿಗಳು ಹಾಗೂ ಸಿಇಒಗಳೊಂದಿಗೆ ವಿಬಿಜಿ ರಾಮ್ ಜಿ ಅನುಷ್ಠಾನ ಹಾಗೂ ಗುಳೆ ತಡೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನೀವು ಗ್ರಾ.ಪಂ.ಗೆ ಭೇಟಿ ನೀಡಿದರೆ ಕಾಮಗಾರಿ ಚುರುಕಾಗುತ್ತದೆ. ಇದರಿಂದ ಗ್ರಾಮೀಣ ಅಭಿವೃದ್ಧಿ ಆಗುತ್ತದೆ ಎಂದರು.
ಮಳೆಯ ಕೊರತೆ ಇರುವ ಪ್ರಸಕ್ತ ಸನ್ನಿವೇಶದಲ್ಲಿ ಎಲ್ಲ ಸಿಇಒಗಳೂ ಕ್ರಿಯಾಶೀಲರಾಗಿ, ತಾಲೂಕು ಕಾರ್ಯನಿರ್ವಹಣಾಧಿಕಾರಿ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಪ್ರಾಮಾಣಿಕವಾಗಿ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸುವಂತೆ ಮಾಡಬೇಕು ಎಂದು ಸೂಚಿಸಿದರು.
ಅದೇ ರೀತಿ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳು ಕೂಡ ಪಿಡಿಒಗಳೊಂದಿಗೆ ಸಭೆ ನಡೆಸಿ, ವಿಬಿಜಿ ರಾಮ್ ಜಿ ಅಡಿ ಅರ್ಹರಿಗೆ ಉದ್ಯೋಗ ನೀಡಲಾಗುತ್ತಿದೆಯೇ, ವೇತನ ಸಕಾಲದಲ್ಲಿ ಪಾವತಿಯಾಗುತ್ತಿದೆಯೇ ಇಲ್ಲವೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಬೇಕು ಎಂದರು.
PublicNext
31/07/2026 08:43 pm