ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಬಿರುಗಾಳಿ ಸಹಿತ ಸುರಿಯುತ್ತಿರುವ ಮಳೆಯ ಅಬ್ಬರ ತೀವ್ರಗೊಂಡಿದೆ. ಶುಕ್ರವಾರ ಬೆಳಗಿನಿಂದಲೇ ವರುಣನ ಆರ್ಭಟ ಚುರುಕುಗೊಂಡಿದ್ದು, ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಅಪಾಯವನ್ನು ತಪ್ಪಿಸುವ ನಿಟ್ಟಿನಲ್ಲಿ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ತಾಲೂಕು ಆಡಳಿತ ಮುಂಜಾಗ್ರತಾ ಕ್ರಮವಾಗಿ ಶಾಲಾ ಪ್ರಾಥಮಿಕ ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಿದೆ.
ಮಳೆಯ ತೀವ್ರತೆ ಹೆಚ್ಚಾಗಿರುವ ಕೊಪ್ಪ ಹಾಗೂ ಶೃಂಗೇರಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ನೀಡಲಾಗಿದೆ. ಇದರ ಜೊತೆಗೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಹೋಬಳಿ ವ್ಯಾಪ್ತಿಯ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೂ ರಜೆ ಪ್ರಕಟಿಸಿ ತಾಲೂಕು ಆಡಳಿತ ಆದೇಶ ಹೊರಡಿಸಿದೆ. ನಿರಂತರವಾಗಿ ಸುರಿಯುತ್ತಿರುವ ಸುರಿಮಳೆಯಿಂದಾಗಿ ಮಲೆನಾಡಿನ ಪ್ರಮುಖ ಜೀವನದಿಗಳಾದ ತುಂಗಾ, ಭದ್ರಾ ಹಾಗೂ ಹೇಮಾವತಿ ನದಿಗಳಿಗೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದ್ದು, ನದಿಗಳು ಮೈದುಂಬಿ ಹರಿಯುತ್ತಿವೆ. ನದಿ ಪಾತ್ರದ ಹಾಗೂ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರಲ್ಲಿ ತೀವ್ರ ಆತಂಕ ಆವರಿಸಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸ್ಥಳೀಯ ಆಡಳಿತ ಸೂಚನೆ ನೀಡಿದೆ.
PublicNext
01/08/2026 08:30 am
LOADING...