ಶಿವಮೊಗ್ಗ: ಪ್ರೀತಿಸಿ ಮದುವೆಯಾಗಿದ್ದ ಯುವತಿಯೊಬ್ಬರು ಶಿವಮೊಗ್ಗದ ಶರಾವತಿ ನಗರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತಳ ಸಂಬಂಧಿಕರು ನೀಡಿದ ದೂರಿನ ಮೇರೆಗೆ ಕಿರುಕುಳ ಆರೋಪದಡಿ ಪತಿಯ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶರಾವತಿ ನಗರದ ನಿವಾಸಿ, ಮೆಗ್ಗಾನ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಡೇಟಾ ಎಂಟ್ರಿ ಆಪರೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ನಂದಿನಿ (24) ಆತ್ಮಹತ್ಯೆ ಮಾಡಿಕೊಂಡ ವಿವಾಹಿತೆ. ಈಕೆಯ ಪತಿ, ಶಿಕಾರಿಪುರ ಮೂಲದ ಸ್ಟೀವನ್ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ.
ನಾಲ್ಕು ವರ್ಷಗಳ ಹಿಂದೆ ನಂದಿನಿ, ಶಿಕಾರಿಪುರದ ಸ್ಟೀವನ್ನನ್ನು ಪ್ರೀತಿಸಿ ವಿವಾಹವಾಗಿದ್ದರು. ಬಳಿಕ ದಂಪತಿ ಎರಡು ವರ್ಷ ಶಿಕಾರಿಪುರದಲ್ಲಿ ವಾಸವಿದ್ದು, ಆನಂತರ ಉದ್ಯೋಗದ ನಿಮಿತ್ತ ಶಿವಮೊಗ್ಗಕ್ಕೆ ಸ್ಥಳಾಂತರಗೊಂಡಿದ್ದರು. ಸ್ಟೀವನ್ ಎನ್ಟಿ ರಸ್ತೆಯ ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮಾಡುತ್ತಿದ್ದರೆ, ನಂದಿನಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು.
ಮದುವೆಯ ಬಳಿಕ ಪತ್ನಿಗೆ ಸ್ಟೀವನ್ ಮಾನಸಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ದಂಪತಿ ನಡುವೆ ಆಗಾಗ್ಗೆ ಮನಸ್ತಾಪ ಉಂಟಾಗುತ್ತಿತ್ತು. ಇದೇ ಕಿರುಕುಳವೇ ನಂದಿನಿ ಅವರ ಆತ್ಮಹತ್ಯೆಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ದೊಡ್ಡಪೇಟೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Kshetra Samachara
01/08/2026 05:26 pm
LOADING...