ಹುಬ್ಬಳ್ಳಿ: ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ (ಕೆಎಂಸಿಆರ್ಐ) ಯ ನಿರ್ದೇಶಕ ಹುದ್ದೆಗೆ ಭಾರಿ ಪೈಪೋಟಿಯ ನಡುವೆ ಮೆಡಿಸಿನ್ ವಿಭಾಗದ ಮುಖ್ಯಸ್ಥ ಡಾ. ಉದಯ ಬಾಂದೆ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದ್ದು, ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.
ನಿರ್ದೇಶಕರ ನೇಮಕಾತಿಗೆ ಸಂಬಂಧಿಸಿ ಗುರುವಾರ ಬೆಂಗಳೂರಿನ ವಿಕಾಸ ಸೌಧದ ವೈದ್ಯಕೀಯ ಶಿಕ್ಷಣ ಸಚಿವರ ಕಾರ್ಯಾಲಯದಲ್ಲಿ ನಡೆಯಬೇಕಿದ್ದ ಸಂದರ್ಶನ ಪ್ರಕ್ರಿಯೆಗೆ, ಧಾರವಾಡದ ಹೈಕೋರ್ಟ್ ಪೀಠ ತಡೆಯಾಜ್ಞೆ ನೀಡಿದೆ. ಸರ್ಕಾರ ಮತ್ತೆ ಕೆಎಂಸಿಆರ್ಐಗೆ ಪ್ರಭಾರಿ ನಿರ್ದೇಶಕರನ್ನಾಗಿ ನಿಯುಕ್ತಿಗೊಳಿಸಿದ್ದು, ಇಂದು ಆದೇಶ ಪ್ರಕಟಗೊಂಡ ಹಿನ್ನೆಲೆಯಲ್ಲಿ ನೂತನ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದರು.
ಕೆಎಂಸಿಆರ್ಐನ ಹಾಲಿ ಪ್ರಭಾರಿ ನಿರ್ದೇಶಕ ಡಾ. ಕೆ.ಎಫ್. ಕಮ್ಮಾರ ಅವರು ಜುಲೈ 31ರಂದು ನಿವೃತ್ತರಾಗಿದ್ದಾರೆ. ಹೀಗಾಗಿ ತಡೆಯಾಜ್ಞೆ ತೆರವುಗೊಂಡು, ಹೊಸದಾಗಿ ನಿರ್ದೇಶಕರು ನೇಮಕಗೊಳ್ಳುವವರೆಗೆ ಪ್ರಭಾರಿಯನ್ನಾಗಿ ಡಾ. ಉದಯ ಬಾಂದೆ ಅವರನ್ನು ನೇಮಕಗೊಳಿಸಿ ಆದೇಶಿಸಿದೆ.
ಆದರೆ ನಿರ್ದೇಶಕ ಹುದ್ದೆಗಾಗಿ 17 ಜನ ಹಿರಿಯ ವೈದ್ಯರು ಅರ್ಜಿ ಸಲ್ಲಿಕೆ ಮಾಡಿದ್ದರು. ಅದರಲ್ಲೂ ಜೇಷ್ಠತೆ ಆಧಾರದ ಮೇಲೆ 17 ಜನ ವೈದ್ಯರು ಅರ್ಜಿ ಸಲ್ಲಿಸಿದ್ದರೂ ಕೂಡ ಅದರಲ್ಲಿ ಟಾಪ್ 10 ಜನ ವೈದ್ಯರನ್ನು ಮಾತ್ರ ಸಂದರ್ಶನಕ್ಕೆ ಆಯ್ಕೆ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ನಿರ್ದೇಶಕ ಹುದ್ದೆಯ ಆಕಾಂಕ್ಷಿ, ಡಿಮ್ಹಾನ್ಸ್ ಪ್ರಭಾರ ನಿರ್ದೇಶಕ ಡಾ. ಅರುಣಕುಮಾರ ಚವ್ಹಾಣ ಅವರು ರಾಜ್ಯ ಹೈಕೋರ್ಟ್ ಮೊರೆ ಹೋಗಿ, ಸಂದರ್ಶನ ನೇಮಕ ಪ್ರಕ್ರಿಯೆಗೆ ತಡೆಯಾಜ್ಞೆ ತಂದಿದ್ದಾರೆ. ಕೆಎಂಸಿಆರ್ಐನ ಜೇಷ್ಠತಾ ಪಟ್ಟಿಯಲ್ಲಿ ನಿರ್ದಿಷ್ಟ ಮಾನದಂಡ ಮತ್ತು ನಿಯಮಾವಳಿ ಅನುಸರಿಸದೆ ನಿರ್ದೇಶಕ ಹುದ್ದೆಗೆ ಸಂದರ್ಶನ ನಡೆಸಲಾಗುತ್ತಿದೆ. ಇದರಿಂದ ಅರ್ಹರಿಗೆ ಅನ್ಯಾಯವಾಗುತ್ತದೆ. ಇದನ್ನು ಕೂಲಂಕಷವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಬೇಕು, ಅಲ್ಲಿಯವರೆಗೆ ಸಂದರ್ಶನ ಪ್ರಕ್ರಿಯೆಗೆ ತಡೆ ನೀಡಬೇಕೆಂದು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿ ಹೈಕೋರ್ಟ್ ಸಂದರ್ಶನ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿದೆ.
ಆದರೆ ಇದೀಗ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿದ 17 ಜನ ವೈದ್ಯರನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ. ನಿರ್ದೇಶಕ ಸ್ಥಾನಕ್ಕೆ ಅರ್ಜಿ ಸಲ್ಲಿಕೆ ಮಾಡದೆ ಇರುವ ಡಾ. ಉದಯ ಬಾಂದೆ ಅವರನ್ನು ಪ್ರಭಾರ ನಿರ್ದೇಶಕರಾಗಿ ಆಯ್ಕೆ ಮಾಡಿದೆ. ಸರ್ಕಾರ ತೆಗೆದುಕೊಂಡ ನಿರ್ಧಾರಕ್ಕೆ ನಾವು ಯಾವಾಗಲೂ ಬದ್ಧ ಎಂದು ಅರ್ಜಿ ಸಲ್ಲಿಕೆ ಮಾಡಿದ ಕೆಲ ವೈದ್ಯರು ಪಬ್ಲಿಕ್ ನೆಕ್ಸ್ಟ್ಭಗೆ ಪ್ರತಿಕ್ರಿಯೆ ನೀಡಿದ್ದು, ಸರ್ಕಾರ ಜೇಷ್ಠತೆಯ ಆಧಾರದ ಮೇಲೆ ಆಯ್ಕೆ ಮಾಡುವ ಅಧಿಕಾರ ಹೊಂದಿದೆ ಎನ್ನಲಾಗಿದೆ.
ಈರಣ್ಣ ವಾಲಿಕಾರ, ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ.
Kshetra Samachara
01/08/2026 08:25 pm