ಬೈಲಹೊಂಗಲ: ಆಯುಷ್ಮಾನ್ ಆರೋಗ್ಯ ಉಪಕೇಂದ್ರಗಳ ಅಡಿಗಲ್ಲು ಸಮಾರಂಭದಲ್ಲಿ ಸಂಸದರನ್ನು ಆಹ್ವಾನಿಸದೇ ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಕಿತ್ತೂರು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕರ್ತರು ಶನಿವಾರ ನಗರದ ತಾಲೂಕು ಆರೋಗ್ಯಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ಆರೋಗ್ಯ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ, ರಾಜ್ಯ ಸರ್ಕಾರದ ವಿರುದ್ಧ ಹಾಗೂ ಇಲಾಖೆಯ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಆಯುಷ್ಮಾನ್ ಆರೋಗ್ಯ ಉಪಕೇಂದ್ರಗಳ ನಿರ್ಮಾಣಕ್ಕೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಶ್ರಮವೂ ಇದೆ. ಆದ್ದರಿಂದ ಶಿಷ್ಟಾಚಾರದಂತೆ ಅಡಿಗಲ್ಲು ಸಮಾರಂಭಕ್ಕೆ ಅವರನ್ನು ಆಹ್ವಾನಿಸಬೇಕಾಗಿತ್ತು. ಆದರೆ ಉದ್ದೇಶಪೂರ್ವಕವಾಗಿ ಕಡೆಗಣಿಸಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ ದೇಶಪಾಂಡೆ, ಕಿತ್ತೂರು ಮಂಡಲ ಅಧ್ಯಕ್ಷ ಶ್ರೀಕರ ಕುಲಕರ್ಣಿ, ಬಿಜೆಪಿ ಮುಖಂಡೆ ಲಕ್ಷ್ಮೀ ಇನಾಮದಾರ, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹಾಂತೇಶ ಚಿನ್ನಪ್ಪಗೌಡರ, ಜಿಲ್ಲಾ ಉಪಾಧ್ಯಕ್ಷ ಬಾಬು ಪಾಟೀಲ ಹಾಗೂ ತಾಲೂಕು ಯುವ ಮೋರ್ಚಾ ಅಧ್ಯಕ್ಷ ನಾಗರಾಜ ದುರ್ಗದ ಅವರು, ಆರೋಗ್ಯ ಇಲಾಖೆಯ ಅಧಿಕಾರಿಗಳು ಸರ್ಕಾರದ ಒತ್ತಡಕ್ಕೆ ಮಣಿದು ಶಿಷ್ಟಾಚಾರವನ್ನು ಪಾಲಿಸಿಲ್ಲ ಎಂದು ಟೀಕಿಸಿದರು.
ಇಂತಹ ಘಟನೆಗಳು ಮುಂದಿನ ದಿನಗಳಲ್ಲಿ ಮರುಕಳಿಸದಂತೆ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚರ ವಹಿಸಬೇಕು. ಇಲ್ಲವಾದಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಸಿದ್ದು ಬೋಳನ್ನವರ, ಮಲ್ಲಿಕಾರ್ಜುನ ಕುಲಕರ್ಣಿ, ರಾಜು ಹೊಸಟ್ಟಿ ಸೇರಿದಂತೆ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
Kshetra Samachara
01/08/2026 08:37 pm