ಮೈಸೂರು/ಟಿ. ನರಸೀಪುರ: ಮೈಸೂರು ಜಿಲ್ಲೆ ಟಿ. ನರಸೀಪುರ ತಾಲ್ಲೂಕಿನ ಬೂದಳ್ಳಿ ಗ್ರಾಮದಲ್ಲಿ ಭಾನುವಾರ ಇಟ್ಟಿಗೆಗೂಡು ಏಕಾಏಕಿ ಕುಸಿದು 3 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಬೂದಳ್ಳಿ ಗ್ರಾಮದ ಸಿದ್ದರಾಜು ಎಂಬುವರಿಗೆ ಸೇರಿದ ಇಟ್ಟಿಗೆಗೂಡಿನಲ್ಲಿ ರಾಜೇಶ್ (32), ನಾಗರಾಜು (35) ಮತ್ತು ನಾರಾಯಣ್ (40) ಎಂಬ ಮೂವರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಇಟ್ಟಿಗೆಗೂಡಿನಿಂದ ಇಟ್ಟಿಗೆಗಳನ್ನು ತೆಗೆಯುತ್ತಿದ್ದ ವೇಳೆ ಏಕಾಏಕಿ ಇಡೀ ಗೂಡು ಕುಸಿದು ಬಿದ್ದಿದೆ. ಅವಶೇಷಗಳಡಿ ಸಿಲುಕಿದ್ದ ಮೂವರು ಸ್ಥಳದಲ್ಲೇ ಉಸಿರು ಚೆಲ್ಲಿದರು.
ಘಟನೆ ನಡೆದ ತಕ್ಷಣ ಸ್ಥಳೀಯರು ಮತ್ತು ಕುಟುಂಬಸ್ಥರು ಸ್ಥಳಕ್ಕೆ ಧಾವಿಸಿದರು. ಮೂವರು ಕಾರ್ಮಿಕರ ಸಾವಿನಿಂದ ಗ್ರಾಮದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ. ಮೃತದೇಹಗಳನ್ನು ನೋಡಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು.
ಮಾಹಿತಿ ತಿಳಿದ ತಕ್ಷಣ ಟಿ. ನರಸೀಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸಲಾಗುತ್ತಿದೆ.
ಮೃತ ಮೂವರು ಇಟ್ಟಿಗೆಗೂಡಿನಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಇಟ್ಟಿಗೆಗೂಡು ಸರಿಯಾದ ರೀತಿಯಲ್ಲಿ ನಿರ್ಮಾಣವಾಗಿರಲಿಲ್ಲವೇ ಅಥವಾ ನಿರ್ಲಕ್ಷ್ಯವೇ ಕಾರಣ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
PublicNext
02/08/2026 01:59 pm
LOADING...