ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ನಿರಂತರ ಮಳೆಯ ಪರಿಣಾಮ ಇದೀಗ ರಾಷ್ಟ್ರೀಯ ಹೆದ್ದಾರಿ 275ಕ್ಕೂ ತಟ್ಟಿದೆ. ಮಡಿಕೇರಿ ಸಮೀಪದ ಕರ್ತೋಜಿ ಬಳಿ ಬೆಟ್ಟದಿಂದ ನಿಧಾನವಾಗಿ ಮಣ್ಣು ಕುಸಿಯುತ್ತಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ.
ಮಡಿಕೇರಿಯಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾದ ರಾಷ್ಟ್ರೀಯ ಹೆದ್ದಾರಿ 275ರ ಪಕ್ಕದಲ್ಲೇ ಭೂಕುಸಿತ ಆರಂಭವಾಗಿದ್ದು, ಮಳೆ ಮತ್ತಷ್ಟು ತೀವ್ರಗೊಂಡರೆ ಹೆಚ್ಚಿನ ಪ್ರಮಾಣದಲ್ಲಿ ಮಣ್ಣು ಕುಸಿಯುವ ಸಾಧ್ಯತೆ ಇದೆ.
ಭೂಕುಸಿತ ಹೆಚ್ಚಾದರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳುವ ಭೀತಿ ಎದುರಾಗಿದೆ. ಇದೇ ವೇಳೆ, ಅದೇ ಸ್ಥಳದಲ್ಲಿ ಸಂಚರಿಸುತ್ತಿದ್ದ ಲಾರಿಯ ಮೇಲೆ ಮರ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನೆಯಿಂದ ಕೆಲಕಾಲ ವಾಹನ ಸವಾರರಲ್ಲಿ ಆತಂಕ ಉಂಟಾಗಿದ್ದು, ಸ್ಥಳೀಯರು ಹಾಗೂ ಅಧಿಕಾರಿಗಳು ಪರಿಸ್ಥಿತಿಯ ಮೇಲೆ ನಿಗಾ ವಹಿಸಿದ್ದಾರೆ. ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಎಚ್ಚರಿಕೆಯಿಂದ ಪ್ರಯಾಣಿಸುವಂತೆ ಸೂಚಿಸಲಾಗಿದೆ.
PublicNext
02/08/2026 06:48 pm
LOADING...