ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಎಸ್ಐ ಹಾಗೂ ಕಾನ್ಸ್ಟೇಬಲ್ ಹೊಡೆದು ವ್ಯಕ್ತಿಯೊಬ್ಬನನ್ನು ಸಾಯಿಸಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್.ಪಿ) ಜಾಹ್ನವಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಗಂಡ ಮತ್ತು ಹೆಂಡತಿ ಇಬ್ಬರೂ ಜಗಳ ಮಾಡಿಕೊಳ್ಳುತ್ತಿದ್ದರು. ಈ ವೇಳೆ '112' ತುರ್ತು ಸಹಾಯವಾಣಿ ಮೂಲಕ ಮಾಹಿತಿ ಲಭಿಸಿದ್ದು, ಅವರಿಬ್ಬರನ್ನೂ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿತ್ತು. ಆ ಸಮಯದಲ್ಲಿ ವ್ಯಕ್ತಿ ದಿಢೀರನೆ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ ಎಂದು ಎಸ್.ಪಿ ತಿಳಿಸಿದ್ದಾರೆ.
ಆದರೆ "ನನ್ನ ಗಂಡನನ್ನು ಪೊಲೀಸರೇ ಕೊಲೆ ಮಾಡಿದ್ದಾರೆ" ಎಂದು ಮೃತನ ಪತ್ನಿ ಶೈನಜ್ ಅವರು ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ ಈಗಾಗಲೇ ಇಬ್ಬರು ಪೊಲೀಸ್ ಸಿಬ್ಬಂದಿಯ ವಿರುದ್ಧ ಎಫ್ಐಆರ್ (FIR) ದಾಖಲಿಸಲಾಗಿದೆ. ಸತ್ತಿರುವ ವ್ಯಕ್ತಿ ಪೊಲೀಸ್ ಸ್ಟೇಷನ್ನಲ್ಲೇ ಸಾವನ್ನಪ್ಪಿದ್ದಾನೋ ಇಲ್ಲವೋ ಎಂಬುದರ ಬಗ್ಗೆ ಸಮಗ್ರ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ಈ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿ ಕೂಡ್ಲಿಗಿ ಡಿವೈಎಸ್.ಪಿ ಮಲ್ಲೇಶಪ್ಪ ದೊಡ್ಡಮನಿ ಅವರನ್ನು ನೇಮಕ ಮಾಡಲಾಗಿದೆ. ಅದಕ್ಕೂ ಮುನ್ನ ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ (ಪೋಸ್ಟ್ಮಾರ್ಟಮ್) ನಡೆಸಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ. ಮೃತ ವ್ಯಕ್ತಿಯನ್ನು ಖಲೀಲ್ ಎಂದು ಗುರುತಿಸಲಾಗಿದ್ದು, ಇವರು ಮೂಲತಃ ಹರಪನಹಳ್ಳಿ ತಾಲೂಕಿನವರಾಗಿದ್ದಾರೆ. ಕಳೆದ ಐದಾರು ವರ್ಷಗಳಿಂದ ಹಗರಿಬೊಮ್ಮನಹಳ್ಳಿಯಲ್ಲೇ ವಾಸವಾಗಿದ್ದರು ಎಂದು ಎಸ್.ಪಿ ಜಾಹ್ನವಿ ಮಾಹಿತಿ ನೀಡಿದ್ದಾರೆ.
PublicNext
03/08/2026 06:29 pm
LOADING...