ಗದಗ : ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ವಾರ್ಡ್ ನಂ. 5ರ ಮಕಾನ ಓಣಿಯಲ್ಲಿ ಬೀದಿ ನಾಯಿ ದಾಳಿ ನಡೆಸಿದ ಪರಿಣಾಮ ಎರಡೂವರೆ ವರ್ಷದ ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ. ಗಾಯಗೊಂಡ ಮಗುವನ್ನು ರಾಹಾ ಗಾಡಿವಾಲೆ (2.5) ಎಂದು ಗುರುತಿಸಲಾಗಿದೆ. ಮಗು ಅಂಗಡಿಗೆ ತೆರಳುತ್ತಿದ್ದ ವೇಳೆ ಏಕಾಏಕಿ ಬೀದಿ ನಾಯಿ ದಾಳಿ ನಡೆಸಿ ತಲೆಗೆ ಕಚ್ಚಿದೆ. ದಾಳಿಯಿಂದ ಮಗು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರು ತಕ್ಷಣ ಧಾವಿಸಿ ಮಗುವನ್ನು ನಾಯಿಯಿಂದ ರಕ್ಷಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದರು.
ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗುವಿನ ಆರೋಗ್ಯದ ಕುರಿತು ವೈದ್ಯರು ನಿಗಾ ವಹಿಸಿದ್ದಾರೆ.
ಸ್ಥಳೀಯರ ಪ್ರಕಾರ, ಕಳೆದ ಕೆಲವು ದಿನಗಳ ಹಿಂದೆಯೂ ಇದೇ ರೀತಿಯಾಗಿ ಮತ್ತೊಂದು ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದವು. ಆದಾಗ್ಯೂ ಪಟ್ಟಣದಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಪುರಸಭೆ ಅಧಿಕಾರಿಗಳು ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.
ಈ ಕುರಿತು ಪುರಸಭೆಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಿ ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ಈ ಘಟನೆ ಲಕ್ಷ್ಮೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
- ಸುರೇಶ ಎಸ್. ಲಮಾಣಿ, ಪಬ್ಲಿಕ್ ನೆಕ್ಸ್ಟ್, ಗದಗ
PublicNext
04/08/2026 04:15 pm
LOADING...