ಕೊಪ್ಪಳ : ರಾಜ್ಯ ಕಾಂಗ್ರೆಸ್ ಸಂಪುಟದಲ್ಲಿ ಕುರುಬ ಸಮುದಾಯಕ್ಕೆ ಸೂಕ್ತ ಸಚಿವ ಸ್ಥಾನ ತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರ ವಿರುದ್ಧ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷವು ಕುರುಬ ಸಮುದಾಯದ ಶಾಸಕರನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಆರೋಪಿಸಿರುವ ಅವರು, ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗುವಂತೆ ಶಾಸಕ ರಾಘವೇಂದ್ರ ಹಿಟ್ನಾಳ್ ಅವರಿಗೆ ಬಹಿರಂಗ ಆಹ್ವಾನ ನೀಡಿದ್ದಾರೆ.
ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಗಾಯತ್ರಿ ಶಾಂತೇಗೌಡ ಅವರ ಸಚಿವ ಸ್ಥಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ತಪ್ಪಿಸಿದ್ದಾರೆ. ಇದು ನಮ್ಮ ಕುರುಬ ಸಮುದಾಯದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಕುರುಬ ಸಮುದಾಯವನ್ನು ಕಾಂಗ್ರೆಸ್ ಕೇವಲ ತನ್ನ ಓಟ್ಬ್ಯಾಂಕ್ಗಾಗಿ ಬಳಸಿಕೊಂಡಿದೆ" ಎಂದು ವಾಗ್ದಾಳಿ ನಡೆಸಿದರು.
ತಮ್ಮ ಮಗ ಯತೀಂದ್ರ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಬೆಳೆಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮುದಾಯದ ಬೇರೆ ನಾಯಕರಿಗೆ ಸಚಿವ ಸ್ಥಾನ ನೀಡುತ್ತಿಲ್ಲ. ಬೇರೆ ಯಾರೂ ಬೆಳೆಯಬಾರದು ಎನ್ನುವ ರೀತಿಯಲ್ಲಿ ಅವರು ರಾಜಕಾರಣ ಮಾಡುತ್ತಿದ್ದಾರೆ. ನಿಜಕ್ಕೂ ಕಲ್ಯಾಣ ಕರ್ನಾಟಕ ಭಾಗದ ಶಾಸಕ ರಾಘವೇಂದ್ರ ಹಿಟ್ನಾಳ್ ಅವರಿಗೆ ಸಚಿವ ಸ್ಥಾನ ನೀಡಬಹುದಾಗಿತ್ತು. ಆದರೆ ಬಿಜೆಪಿ ಪಕ್ಷವು ಕುರುಬ ಸಮುದಾಯಕ್ಕೆ ಸೂಕ್ತ ಗೌರವ ಹಾಗೂ ಎಲ್ಲಾ ಸ್ಥಾನಮಾನಗಳನ್ನು ನೀಡಿದೆ. ಆದ್ದರಿಂದ ಕಾಂಗ್ರೆಸ್ ತೊರೆದು ಕುರುಬ ಸಮುದಾಯದ ಶಾಸಕರು ದಯವಿಟ್ಟು ಬಿಜೆಪಿಗೆ ಬನ್ನಿ ಎಂದು ಶಾಸಕ ದೊಡ್ಡನಗೌಡ ಪಾಟೀಲ್ ಮನವಿ ಮಾಡಿದರು.
"ಉತ್ತರ ಕರ್ನಾಟಕ ಭಾಗದಲ್ಲಿ ಕುರುಬ ಸಮುದಾಯದವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದರೆ ಕಾಂಗ್ರೆಸ್ ಅವರಿಗೆ ಸತತವಾಗಿ ಅನ್ಯಾಯ ಮಾಡುತ್ತ ಬಂದಿದೆ. ಈ ಹಿಂದೆ ಶೇಕಡಾ 90 ರಷ್ಟು ಜನರು ಸಿದ್ದರಾಮಯ್ಯ ಅವರು ಸಿಎಂ ಆಗಬೇಕೆಂದು ಬೆಂಬಲಿಸಿ ಮತ ಹಾಕಿದ್ದರು. ಆದರೆ ಈಗ ಕುರುಬ ಸಮುದಾಯವನ್ನು ಕಾಂಗ್ರೆಸ್ ಸಂಪೂರ್ಣವಾಗಿ ಮರೆತಿದೆ" ಎಂದು ಅವರು ಆಕ್ರೋಶ ಹೊರಹಾಕಿದರು.
PublicNext
04/08/2026 04:46 pm
LOADING...