ಕುಂದಾಪುರ, : ತಾಲೂಕಿನ ಹಟ್ಟಿಯಂಗಡಿ ಗ್ರಾಮದ ಕನ್ಯಾನ ಭಾಗದಲ್ಲಿ ನೇರಳಕಟ್ಟೆ–ತಲ್ಲೂರು ಸಂಪರ್ಕಿಸುವ ಪ್ರಮುಖ ರಸ್ತೆ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಸಂಪೂರ್ಣ ಜಲಾವೃತಗೊಂಡಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಮಳೆಯ ನೀರು ರಸ್ತೆಯ ಮೇಲೆಯೇ ಹರಿದು ರಸ್ತೆ ಹೊಳೆಯಂತಾಗಿರುವುದರಿಂದ ಸಂಚಾರ ದುಸ್ತರವಾಗಿದೆ. ಈ ಪರಿಸ್ಥಿತಿಯಿಂದ ಗ್ರಾಮಸ್ಥರು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಸ್ತೆಯ ಎರಡೂ ಬದಿಯ ಚರಂಡಿಗಳನ್ನು ಖಾಸಗಿ ಜಾಗದ ಮಾಲೀಕರು ಮುಚ್ಚಿರುವ ಪರಿಣಾಮ ಮಳೆಯ ನೀರು ಸರಾಗವಾಗಿ ಹರಿಯದೆ ರಸ್ತೆಯಲ್ಲೇ ನಿಂತು ಜಲಾವೃತವಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಅಧಿಕಾರಿಗಳು ಸಮಸ್ಯೆ ತಿಳಿದಿದ್ದರೂ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ದಲಿತ ಮುಖಂಡ ಕೆಂಚನೂರು ನಾಗರಾಜ್ ಮಾತನಾಡಿ, ಸಮಸ್ಯೆಯನ್ನು ಕೂಡಲೇ ಬಗೆಹರಿಸದಿದ್ದರೆ ಮುಂದಿನ ದಿನಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ರಸ್ತೆಯ ಎರಡೂ ಬದಿಯ ಚರಂಡಿಗಳನ್ನು ತಕ್ಷಣ ತೆರವುಗೊಳಿಸಿ ಮಳೆಯ ನೀರು ಸರಾಗವಾಗಿ ಹರಿಯುವಂತೆ ಕ್ರಮ ಕೈಗೊಳ್ಳಬೇಕು. ಅಲ್ಲದೆ, ಚರಂಡಿ ಮುಚ್ಚಿರುವವರ ವಿರುದ್ಧ ಸಂಬಂಧಪಟ್ಟ ಇಲಾಖೆ ಕಾನೂನು ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ವರದಿ: ದಾಮೋದರ ಮೊಗವೀರ ನಾಯಕವಾಡಿ, ಪಬ್ಲಿಕ್ ನೆಕ್ಸ್ಟ್ ಬೈಂದೂರು
PublicNext
04/08/2026 07:51 pm
LOADING...