ಚಿಕ್ಕಮಗಳೂರು: ಗ್ರಾಮಕ್ಕೆ ಸೂಕ್ತ ಬಸ್ ಸೌಕರ್ಯವಿಲ್ಲದೆ ಪ್ರತಿದಿನ ಶಾಲಾ-ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ಭಾರಿ ಪರದಾಟ ನಡೆಸುತ್ತಿದ್ದು, ತಕ್ಷಣವೇ ಸಾರಿಗೆ ಸಮಸ್ಯೆಯನ್ನು ಬಗೆಹರಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರಿಗೆ ಮನವಿ ಸಲ್ಲಿಸಿದರು.
ಕಡೂರು ತಾಲೂಕಿನ ನಾಗರಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ 'ಮಂಗೇನಹಳ್ಳಿ' ಗ್ರಾಮದಲ್ಲಿ 200ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು, ಬಹುತೇಕರು ಆರ್ಥಿಕವಾಗಿ ಹಿಂದುಳಿದ ವರ್ಗದವರಾಗಿದ್ದಾರೆ. ಈ ಒಂದೇ ಗ್ರಾಮದಿಂದ 90ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿದಿನ ಶಿಕ್ಷಣಕ್ಕಾಗಿ ಕಡೂರು ಪಟ್ಟಣಕ್ಕೆ ಪ್ರಯಾಣಿಸಬೇಕಿದೆ. ಇಷ್ಟೇ ಅಲ್ಲದೆ, ಸುತ್ತಮುತ್ತಲಿನ ಗುಣಸಾಗರ, ಕಬ್ಬಳ್ಳಿ, ಕುಪ್ಪಾಳು ಹಾಗೂ ಸಿದ್ದಾಪುರ ಭಾಗದ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಡೂರಿನ ಶಾಲಾ-ಕಾಲೇಜುಗಳನ್ನೇ ನೆಚ್ಚಿಕೊಂಡಿದ್ದಾರೆ.
ಸಮಯಕ್ಕೆ ಸರಿಯಾಗಿ ಕೆಎಸ್ಆರ್ಟಿಸಿ (KSRTC) ಬಸ್ ಇಲ್ಲದಿರುವುದರಿಂದ ವಿದ್ಯಾರ್ಥಿಗಳು ನಿಯಮಿತವಾಗಿ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗದೆ ವಿದ್ಯಾಭ್ಯಾಸದಿಂದ ವಂಚಿತರಾಗುವ ಭೀತಿ ಎದುರಾಗಿದೆ. "ಗ್ರಾಮೀಣ ಭಾಗದ ಮಕ್ಕಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು, ತಕ್ಷಣವೇ ಮಂಗೇನಹಳ್ಳಿ ಮಾರ್ಗವಾಗಿ ಸಮಯಕ್ಕೆ ಸರಿಯಾಗಿ ಸರ್ಕಾರಿ ಬಸ್ ಸಂಚಾರ ಆರಂಭಿಸಬೇಕು" ಎಂದು ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಚೇತನ್ ಹಾಗೂ ಸ್ಥಳೀಯ ನಿವಾಸಿ ಧನ್ಯಕುಮಾರಿ ನೇತೃತ್ವದಲ್ಲಿ ಆಗಮಿಸಿದ್ದ ಗ್ರಾಮಸ್ಥರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.
PublicNext
04/08/2026 07:56 pm
LOADING...