ಶಿರಸಿ: ತಾಲೂಕಿನ ಕಾನಗೋಡ ಗ್ರಾಮದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಶ್ರೀಗಂಧದ ಮರದ ತುಂಡುಗಳನ್ನು ಕೆತ್ತನೆ ಮಾಡುತ್ತಿದ್ದ ಜಾಲದ ಮೇಲೆ ಶಿರಸಿ ವಲಯ ಅರಣ್ಯಾಧಿಕಾರಿಗಳು ದಾಳಿ ನಡೆಸಿ, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ ಬರೋಬ್ಬರಿ 33.390 ಕೆ.ಜಿ. ತೂಕದ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಾನಗೋಡ ಗ್ರಾಮದ ಜನತಾ ಕಾಲೋನಿ ನಿವಾಸಿ ದಯಾನಂದ ನಾರಾಯಣ ನಾಯ್ಕ (48) ಬಂಧಿತ ಆರೋಪಿಯಾಗಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದ ಮತ್ತೊಬ್ಬ ಆರೋಪಿ, ಮಶಿಗದ್ದೆ ಹೊಳೆಕೈ ನಿವಾಸಿ ಮಂಜುನಾಥ ಅಣ್ಣಪ್ಪ ದೇವಾಡಿಗ (47) ದಾಳಿ ವೇಳೆ ಪರಾರಿಯಾಗಿದ್ದು, ಆತನ ಪತ್ತೆಗೆ ಜಾಲ ಬೀಸಲಾಗಿದೆ.
ಕಾರ್ಯಾಚರಣೆಯ ವಿವರ:
ಉತ್ತರ ಕನ್ನಡ ವಿಭಾಗದ ಡಿಎಫ್ಒ (DFO) ಸಂದೀಪ್ ಸೂರ್ಯವಂಶಿ ಹಾಗೂ ಎಸಿಎಫ್ (ACF) ಅಮಿತ್ ಕುಮಾರ್ ಚವ್ಹಾಣ್ ಅವರ ಮಾರ್ಗದರ್ಶನದಲ್ಲಿ, ಶಿರಸಿ ವಲಯ ಅರಣ್ಯಾಧಿಕಾರಿ (RFO) ಭವ್ಯಾ ನಾಯ್ಕ್ ನೇತೃತ್ವದಲ್ಲಿ ಈ ಯಶಸ್ವಿ ಕಾರ್ಯಾಚರಣೆ ನಡೆದಿದೆ. ದಾಳಿಯಲ್ಲಿ ಉಪ ವಲಯ ಅರಣ್ಯಾಧಿಕಾರಿ ಕಾರ್ತಿಕ್ ನಾರ್ವೇಕರ್, ಅರಣ್ಯ ರಕ್ಷಕರಾದ (ಗಾರ್ಡ್) ರೋಹಿತ್ ಎಂ. ನಾಯ್ಕ್ ಮತ್ತು ಮಂಜುನಾಥ್ ಜಹಗೀರದಾರ್ ಭಾಗವಹಿಸಿದ್ದರು.
ತಲೆಮರೆಸಿಕೊಂಡಿರುವ ಆರೋಪಿಯ ಪತ್ತೆಗೆ ಶಿರಸಿ ವಲಯ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಚುರುಕುಗೊಳಿಸಿದ್ದಾರೆ.
Kshetra Samachara
04/08/2026 08:55 pm
LOADING...