ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಅಕ್ರಮವಾಗಿ ಬಾಂಗ್ಲಾದೇಶಿಗರು ನೆಲೆಸಿದ್ದಾರೆ ಎಂಬ ದಶಕಗಳ ಆರೋಪಕ್ಕೆ ಕೊನೆಗೂ ಪುಷ್ಟಿ ಸಿಕ್ಕಿದ್ದು, ಪೊಲೀಸರ ಕಾರ್ಯಾಚರಣೆಯಲ್ಲಿ ಐವರು ಅಕ್ರಮ ಬಾಂಗ್ಲಾ ನಿವಾಸಿಗಳು ಬಂಧನಕ್ಕೊಳಗಾಗಿದ್ದಾರೆ.
ಕೇಂದ್ರ ಗುಪ್ತಚರ ಇಲಾಖೆ ನೀಡಿದ ಖಚಿತ ಮಾಹಿತಿ ಆಧರಿಸಿ ಸ್ಥಳೀಯ ಪೊಲೀಸರು ನಡೆಸಿದ ಜಂಟಿ ತಪಾಸಣೆ ವೇಳೆ ಈ ಅಕ್ರಮ ವಲಸಿಗರು ಪತ್ತೆಯಾಗಿದ್ದಾರೆ. ಬಂಧಿತರನ್ನು ಜಹಾಂಗೀರ್, ಫೈಸುದ್ದಿನ್, ನುಮನ್ ಬಶೀರ್, ಮಹಮದ್ ಹುಮೈನ್ ಮತ್ತು ಮಹಮದ್ ಹಸೀಬುಲ್ ಎಂದು ಗುರುತಿಸಲಾಗಿದ್ದು, ಅವರಿಂದ ಬಾಂಗ್ಲಾದೇಶದ ಅಧಿಕೃತ ಗುರುತಿನ ಚೀಟಿಗಳನ್ನು (ID Cards) ವಶಪಡಿಸಿಕೊಳ್ಳಲಾಗಿದೆ. ಇವರು ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾಫಿ ಎಸ್ಟೇಟ್, ಗಾರೆ ಕೆಲಸ ಹಾಗೂ ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂಬುದು ತನಿಖೆಯಿಂದ ತಿಳಿದುಬಂದಿದೆ.
ಮಲೆನಾಡು ಭಾಗದ ಎಸ್ಟೇಟ್ಗಳು, ಹೋಂ ಸ್ಟೇ ಹಾಗೂ ರೆಸಾರ್ಟ್ಗಳಲ್ಲಿ ಸಾವಿರಾರು ಅಕ್ರಮ ಬಾಂಗ್ಲಾದೇಶಿಗರು ಅಸ್ಸಾಂ ಮೂಲದ ಕಾರ್ಮಿಕರ ಹೆಸರಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂಬ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಸುದೀರ್ಘ ಆರೋಪಕ್ಕೆ ಈ ಘಟನೆ ಸಾಕ್ಷಿಯಂತಿದೆ. ಪ್ರಸ್ತುತ ಸಿಕ್ಕಿಬಿದ್ದಿರುವ ಐವರು ಕೇವಲ ಮಾದರಿಯಷ್ಟೇ ಆಗಿದ್ದು, ಇನ್ನು ಅನೇಕರು ಜಿಲ್ಲೆಯಾದ್ಯಂತ ಅಡಗಿರುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.
ಪ್ರಸ್ತುತ ಪೊಲೀಸ್ ಇಲಾಖೆಯು ಜಿಲ್ಲೆಯ ಪ್ರತಿಯೊಂದು ಠಾಣಾ ವ್ಯಾಪ್ತಿಯಲ್ಲಿ ಹೊರರಾಜ್ಯ ಹಾಗೂ ಹೊರಜಿಲ್ಲೆಯ ಕಾರ್ಮಿಕರ ಸಂಪೂರ್ಣ ಮಾಹಿತಿ, ಫೋಟೋ ಮತ್ತು ದಾಖಲೆಗಳನ್ನು ಕಲೆಹಾಕುತ್ತಿದೆ. ಬಂಧಿತರು ಭಾರತಕ್ಕೆ ಹೇಗೆ ಅಕ್ರಮವಾಗಿ ತಲುಪಿದರು, ಇವರ ಹಿನ್ನೆಲೆಯಲ್ಲಿರುವ ಏಜೆಂಟ್ಗಳು ಯಾರು ಹಾಗೂ ಸ್ಥಳೀಯವಾಗಿ ಯಾರ ಸಹಕಾರ ಸಿಕ್ಕಿದೆ ಎಂಬಿತ್ಯಾದಿ ಆಯಾಮಗಳಲ್ಲಿ ತೀವ್ರ ವಿಚಾರಣೆ ನಡೆಸಲಾಗುತ್ತಿದೆ.
PublicNext
04/08/2026 09:59 pm
LOADING...