ಕಳಸ : ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರಂತರ ನಿರ್ಲಕ್ಷ್ಯಕ್ಕೆ ಬೇಸತ್ತ ಗ್ರಾಮಸ್ಥರೊಬ್ಬರು ರಸ್ತೆಯ ಕೆಸರು ಗುಂಡಿಯಲ್ಲೇ ಮಲಗಿ ಆಕ್ರೋಶ ವ್ಯಕ್ತಪಡಿಸಿರುವ ವಿಶಿಷ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ 'ಹೇರಡಿಕೆ ಭಟ್ರುಮಕ್ಕಿ ಕೈಮರ' ಗ್ರಾಮದಲ್ಲಿ ನಡೆದಿದೆ.
ಸುಮಾರು 70 ರಿಂದ 100 ಕುಟುಂಬಗಳು ವಾಸಿಸುವ ಈ ಗ್ರಾಮಕ್ಕೆ ಮೂಲಭೂತ ಸೌಕರ್ಯವಾದ ಸೂಕ್ತ ರಸ್ತೆ ಸಂಪರ್ಕವೇ ಇಲ್ಲದಂತಾಗಿದೆ. ಮಳೆಗಾಲದಲ್ಲಂತೂ ಈ ಮಾರ್ಗ ಸಂಪೂರ್ಣ ಕೆಸರು ಗದ್ದೆಯಾಗಿ ಪರಿವರ್ತನೆಯಾಗುತ್ತಿದ್ದು, ದೈನಂದಿನ ಸಂಚಾರಕ್ಕೆ ತೀವ್ರ ತೊಂದರೆ ಎದುರಾಗಿದೆ. ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಪ್ರತಿನಿತ್ಯ ಎದ್ದು-ಬಿದ್ದು ಓಡಾಡುವ ದುಸ್ಥಿತಿ ನಿರ್ಮಾಣವಾಗಿದೆ.
ರಸ್ತೆಯ ದುರವಸ್ಥೆಯಿಂದಾಗಿ ಬೇಸತ್ತ ವಿದ್ಯಾರ್ಥಿಗಳು ಮಳೆಗಾಲದಲ್ಲಿ ಶಾಲೆಗೆ ಹೋಗುವುದನ್ನೇ ಬಿಡುವಂತಾಗಿತ್ತು. ಗ್ರಾಮಕ್ಕೆ ಕಾಂಕ್ರೀಟ್ ರಸ್ತೆ ನಿರ್ಮಿಸಿಕೊಡುವಂತೆ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಹತ್ತಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.
ಮನವಿ ಸಲ್ಲಿಸಿ ಸಾಕಾದ ಗ್ರಾಮಸ್ಥರು ಅಂತಿಮವಾಗಿ ತಮ್ಮ ರಸ್ತೆಯನ್ನು ತಾವೇ ಸರಿಪಡಿಸಿಕೊಳ್ಳಲು ಮುಂದಾಗಿದ್ದಾರೆ. ಸ್ವಂತ ಖರ್ಚಿನಲ್ಲಿ ಕಲ್ಲು ಹಾಗೂ ಮಣ್ಣು ತರಿಸಿ, ಶ್ರಮದಾನದ ಮೂಲಕ ಕೆಸರು ರಸ್ತೆಯನ್ನು ತಾತ್ಕಾಲಿಕವಾಗಿ ದುರಸ್ತಿ ಮಾಡಿಕೊಂಡಿದ್ದಾರೆ. ಹತ್ತಾರು ವರ್ಷಗಳಿಂದ ಮನವಿ ಮಾಡಿದರೂ ಸ್ಪಂದಿಸದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಬೇಜವಾಬ್ದಾರಿತನದ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
PublicNext
05/08/2026 03:31 pm
LOADING...