ಚಿಕ್ಕಬಳ್ಳಾಪುರ : ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಬುಧವಾರ ಕರೆ ನೀಡಲಾಗಿದ್ದ ಬಂದ್ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಾಗೇಪಲ್ಲಿ, ಚೇಳೂರು ಹಾಗೂ ಗುಡಿಬಂಡೆ ಮೂರು ತಾಲೂಕುಗಳಲ್ಲಿಯೂ ಬಂದ್ ಯಶಸ್ವಿಯಾಗಿದ್ದು, ಆಸ್ಪತ್ರೆಗಳು ಮತ್ತು ಮೆಡಿಕಲ್ ಸ್ಟೋರ್ಗಳನ್ನು ಹೊರತುಪಡಿಸಿ ಬಹುತೇಕ ಅಂಗಡಿ-ಮುಂಗಟ್ಟುಗಳು ಸಂಪೂರ್ಣವಾಗಿ ಮುಚ್ಚಲ್ಪಟ್ಟಿದ್ದವು. ಸಾರ್ವಜನಿಕ ವಾಹನಗಳ ಸಂಚಾರವೂ ಬಹುತೇಕ ಸ್ಥಗಿತಗೊಂಡಿದ್ದು, ಶಾಲೆ ಹಾಗೂ ಕಾಲೇಜುಗಳಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಪರದಾಡುವಂತಾಯಿತು.
ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಚೇಳೂರು, ಗುಡಿಬಂಡೆ ಮತ್ತು ಬಾಗೇಪಲ್ಲಿ ಪಟ್ಟಣಗಳಲ್ಲಿ ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. ಹಲವು ಕಡೆ ರಸ್ತೆಗಳಲ್ಲಿ ಕುಳಿತು ಧರಣಿ ನಡೆಸಿದ ಪ್ರತಿಭಟನಾಕಾರರು, ಇನ್ನೂ ಕೆಲವು ಪ್ರಮುಖ ರಸ್ತೆಗಳಲ್ಲಿ ಕಾಲ್ನಡಿಗೆ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದ ನಿರ್ಧಾರದಿಂದ ಕ್ಷೇತ್ರದ ಜನತೆಗೆ ಅನ್ಯಾಯವಾಗಿದೆ ಎಂದು ಆರೋಪಿಸಿದ ಕಾಂಗ್ರೆಸ್ ಕಾರ್ಯಕರ್ತರು, ತಮ್ಮ ಅಸಮಾಧಾನವನ್ನು ಪ್ರತಿಭಟನೆಯ ಮೂಲಕ ಹೊರಹಾಕಿದರು.
ಪ್ರತಿಭಟನೆಯ ಹಿನ್ನೆಲೆಯಲ್ಲಿ ಕೆಲವೆಡೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಂಡಿತ್ತು.
PublicNext
05/08/2026 04:14 pm
LOADING...