ಬೆಂಗಳೂರು : ನೂತನ ಸಚಿವರು ತಮಗೆ ಜವಾಬ್ದಾರಿ ವಹಿಸಿರುವ ಜಿಲ್ಲೆಗಳಿಗೆ ತೆರಳಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಪರಿಸ್ಥಿತಿಯನ್ನು ಪರಿಶೀಲಿಸಬೇಕು. ನಂತರ ಕಂದಾಯ ಸಚಿವರಿಗೆ ವರದಿ ಸಲ್ಲಿಸಬೇಕು ಎಂದು ಸಚಿವ ಸಂಪುಟ ಸಭೆಯಲ್ಲಿ ನಿರ್ದೇಶನ ನೀಡಲಾಗಿದೆ” ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮಾಹಿತಿ ನೀಡಿದರು.
ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಅವರು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
“ನಮ್ಮ ಮುಂದಿರುವ ಸವಾಲುಗಳು ಹಾಗೂ ಎದುರಾಗಬಹುದಾದ ಸಮಸ್ಯೆಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ್ದೇವೆ. ಬರಗಾಲ ಹಾಗೂ ಕಾವೇರಿ ಭಾಗದ ಪ್ರದೇಶದಲ್ಲಿನ ನೀರಿನ ಅಭಾವದ ಕುರಿತು ಸುದೀರ್ಘವಾಗಿ ಮಾತನಾಡಿದ್ದೇವೆ. ಈಗ ತಾತ್ಕಾಲಿಕವಾಗಿ ಮಳೆಯಿಂದಾಗಿ ಸಮಸ್ಯೆ ನಿವಾರಣೆಯಾಗಿರಬಹುದು. ದೊಡ್ಡ ಕಂಟಕ ಎದುರಾಗಿತ್ತು, ಆದರೆ ದೇವರ ಕೃಪೆಯಿಂದ ಸದ್ಯಕ್ಕೆ ಅದು ತಪ್ಪಿದೆ. ತಮಿಳುನಾಡಿಗೆ 3,500 ಕ್ಯೂಸೆಕ್ ನೀರು ಹರಿಸುವಂತೆ ಸೂಚಿಸಲಾಗಿತ್ತು, ಆದರೆ ನಾವು 30,000 ಕ್ಯೂಸೆಕ್ಸ್ ನೀರು ಹರಿಸುವಂತಾಗಿದೆ. ಕೆಆರ್ಎಸ್, ಹೇಮಾವತಿ ಜಲಾಶಯಗಳು ಇನ್ನೂ ಪೂರ್ಣ ತುಂಬಿಲ್ಲವಾದರೂ ಒಳಹರಿವು ಹೆಚ್ಚಾಗಿದೆ. ಮಲೆನಾಡಿನಲ್ಲಿ ಮಳೆಯಾಗುತ್ತಿದ್ದು, ತುಂಗಭದ್ರಾಗೆ ಇನ್ನು ನೀರು ಬರಬೇಕಿದೆ. ಆಲಮಟ್ಟಿಯಲ್ಲಿ ನೀರಿನ ಹರಿವು ಉತ್ತಮವಾಗಿದೆ. ಆದಾಗ್ಯೂ ಬರಗಾಲದ ಛಾಯೆ ಇನ್ನೂ ಇದೆ. ಮಳೆಯಿಂದಾಗಿ ಶಿವಮೊಗ್ಗ, ತೀರ್ಥಹಳ್ಳಿ ಭಾಗಗಳಲ್ಲಿ ಅನಾಹುತಗಳಾಗಿವೆ. ಸೂಕ್ತ ವರದಿ ತರಿಸಿಕೊಂಡು ಪರಿಹಾರ ವಿತರಿಸಲಾಗುವುದು” ಎಂದು ತಿಳಿಸಿದರು.
“ಸಚಿವ ಸಂಪುಟ ವಿಸ್ತರಣೆಯಾಗುತ್ತಿರುವ ಹಿನ್ನೆಲೆಯಲ್ಲಿ, ಸ್ಥಳೀಯ ನಾಯಕರ ಮೂಲಕ ಪರಿಹಾರ ಘೋಷಣೆ ಮಾಡಿಸಲು ತೀರ್ಮಾನಿಸಿದ್ದೇವೆ. ನಾಳೆ ಒಂದು ದಿನ ಹೊರತುಪಡಿಸಿ ನಾಡಿದ್ದಿನಿಂದ ನೂತನ ಸಚಿವರು ತಮಗೆ ಹಂಚಿಕೆಯಾದ ಜಿಲ್ಲೆಗಳಿಗೆ ಭೇಟಿ ನೀಡಿ, ಅತಿವೃಷ್ಟಿ ಹಾಗೂ ಅನಾವೃಷ್ಟಿ ಪೀಡಿತ ಸ್ಥಳಗಳನ್ನು ಪರಿಶೀಲಿಸಬೇಕು. ಬಳಿಕ ಕಂದಾಯ ಸಚಿವರಿಗೆ ಸಮಗ್ರ ವರದಿ ನೀಡಬೇಕು. ವಿರೋಧ ಪಕ್ಷದ ನಾಯಕರು ಅಧಿವೇಶನ ನಡೆಸಲು ಬಿಡುವುದಿಲ್ಲ ಎಂದು ಹೇಳುತ್ತಿದ್ದಾರೆ. ಅವರು ಹಿಂದೆ ಕಂದಾಯ ಸಚಿವರಾಗಿದ್ದವರು, ಅನುಭವಸ್ಥರು. ಅವರಿಗೆ ಸೂಕ್ತ ಸಮಯ ಬಂದಾಗ ಉತ್ತರಿಸೋಣ.
ನಾನು ಈಗಾಗಲೇ ಬೆಳಗಾವಿ, ಚಿತ್ರದುರ್ಗ, ಕಲಬುರಗಿ ವಿಭಾಗಗಳಲ್ಲಿ ಸಭೆ ನಡೆಸಿದ್ದು, ಮೈಸೂರು ವಿಭಾಗದ ಸಭೆಯನ್ನು ಶೀಘ್ರವೇ ಕರೆಯಲಾಗುವುದು. ಕುಡಿಯುವ ನೀರಿನ ಪೂರೈಕೆಗಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ₹1 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಜಿಲ್ಲಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಿದ ಬಳಿಕ ಸರ್ಕಾರ ಮುಂದಿನ ತೀರ್ಮಾನ ಕೈಗೊಳ್ಳಲಿದೆ. ಎಲ್ಲಾ ಪಕ್ಷಗಳ ಜನಪ್ರತಿನಿಧಿಗಳನ್ನು ಒಟ್ಟಿಗೆ ಕರೆದೊಯ್ದು ಪರಿಶೀಲನೆ ನಡೆಸಲು ಸೂಚಿಸಲಾಗಿದೆ” ಎಂದು ಸ್ಪಷ್ಟಪಡಿಸಿದರು.
PublicNext
05/08/2026 05:13 pm