ಬೆಳಗಾವಿ: "ತಾಯಿಯ ಎದೆಹಾಲು ಮಗುವಿಗೆ ಪ್ರಕೃತಿ ನೀಡಿದ ಅಮೂಲ್ಯ ಕೊಡುಗೆಯಾಗಿದ್ದು, ಜನನದ ನಂತರದ ಮೊದಲ ಆರು ತಿಂಗಳವರೆಗೆ ಕೇವಲ ಎದೆಹಾಲನ್ನೇ ನೀಡಬೇಕು. ಇದು ಮಗುವಿಗೆ ಸಂಪೂರ್ಣ ಪೌಷ್ಟಿಕ ಆಹಾರವಾಗಿರುವುದರ ಜೊತೆಗೆ ಅದರ ಮೊದಲ ರಕ್ಷಾಕವಚವೂ ಆಗಿದೆ" ಎಂದು ಮಹಾನಗರ ಪಾಲಿಕೆ ಸದಸ್ಯೆ ಹಾಗೂ ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಲಕ್ಷ್ಮೀ ಮಹಾದೇವ ರಾಠೋಡ್ ತಿಳಿಸಿದರು.
ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಂಟಮುರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಐ.ಪಿ. ಗಡಾದ ಅವರು ಮಾತನಾಡಿ, "ಆಗಸ್ಟ್ 1ರಿಂದ 7ರವರೆಗೆ ವಿಶ್ವ ಸ್ತನ್ಯಪಾನ ಸಪ್ತಾಹವನ್ನು ಆಚರಿಸುವ ಮೂಲಕ ಗರ್ಭಿಣಿಯರು, ಬಾಣಂತಿಯರು ಹಾಗೂ ಸಾರ್ವಜನಿಕರಲ್ಲಿ ಸ್ತನ್ಯಪಾನದ ಮಹತ್ವದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. 'ಮೊದಲ ಆಹಾರ ಮೊದಲ ಉಡುಗೊರೆ, ತಾಯಿಯ ಎದೆಹಾಲಿನ ಪೋಷಣೆ ಎಲ್ಲರ ಜವಾಬ್ದಾರಿ' ಎಂಬ ಸಂದೇಶವನ್ನು ಪ್ರತಿಯೊಬ್ಬರೂ ಪಾಲಿಸಬೇಕು" ಎಂದು ಕರೆ ನೀಡಿದರು.
ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ. ಎಸ್. ಎಸ್. ಸಾಯನ್ನವರ್ ಅವರು ವಿಶ್ವ ಸ್ತನ್ಯಪಾನ ಸಪ್ತಾಹದ ಧೈಯವಾಕ್ಯವಾದ "ಸುಸ್ಥಿರ ಜೀವನದ ಭದ್ರ ಅಡಿಪಾಯಕ್ಕಾಗಿ ಸ್ತನ್ಯಪಾನ: ಪರಿಣಾಮಕಾರಿ ಬೆಂಬಲ ವ್ಯವಸ್ಥೆಗಳನ್ನು ಸದೃಢಗೊಳಿಸೋಣ" ಎಂಬ ಸಂದೇಶದ ಕುರಿತು ವಿವರಣೆ ನೀಡಿದರು.
ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ರಮೇಶ್ ದಂಡಗಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸಪ್ತಾಹದ ಉದ್ದೇಶಗಳನ್ನು ವಿವರಿಸಿದರು.
ಈ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಸಂಜಯ್ ನಾಂದ್ರೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಪ್ರಾಚೀತಿ ಉದಯ್ ಕುಮಾರ್, ವೈದ್ಯರಾದ ಡಾ. ಸನ್ಮತಿ, ಡಾ. ಮಹಾಂತೇಶ್, ಡಾ. ಅನುಷಾ ಪಾಟೀಲ ಸೇರಿದಂತೆ ಆರೋಗ್ಯ ಸಿಬ್ಬಂದಿ, ಗರ್ಭಿಣಿಯರು ಹಾಗೂ ಬಾಣಂತಿಯರು ಭಾಗವಹಿಸಿದ್ದರು. ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪ್ರಕಾಶ್ ಜಿ. ಮಾಣೆ ಕಾರ್ಯಕ್ರಮ ನಿರೂಪಿಸಿದರು.
Kshetra Samachara
05/08/2026 05:47 pm