ಬೆಳಗಾವಿ : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಜಗನ್ನಾಥ್ ಹಲಮಡಗಿ ಅವರು ಬೆಳಗಾವಿ ಡಿಡಿಪಿಐ (DDPI) ಕಚೇರಿಗೆ ಭೇಟಿ ನೀಡಿ ಸಭೆ ನಡೆಸಿದರು, ಶೈಕ್ಷಣಿಕ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬಿ.ಆರ್.ಸಿ & ಸಿ.ಆರ್.ಸಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ಹಮ್ಮಿಕೊಳ್ಳಲಾಯಿತು.
ಸದರಿ ಸಭೆಯಲ್ಲಿ ಡಿಡಿಪಿಐ ಲೀಲಾವತಿ ಹಿರೇಮಠ ಅವರು ಆಯೋಗದ ಸದಸ್ಯರಾದ ಜಗನ್ನಾಥ್ ಹಲಮಡಗಿ ಅವರನ್ನು ಸ್ವಾಗತಿಸಿ, ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಕಾರ್ಯನಿರ್ವಹಣೆಯ ಬಗ್ಗೆ ವಿವರಿಸಿದರು.
ತದನಂತರ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಜಗನ್ನಾಥ್ ಹಲಮಡಗಿ ಅವರು, "ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೆ ವಿಜ್ಞಾನಿಗಳೊಂದಿಗೆ ಸಂವಾದ ಕಾರ್ಯಕ್ರಮಗಳನ್ನು ಏರ್ಪಡಿಸುವುದು, ವಾಹನಗಳ ಸಂಚಾರ ನಿಯಮ (ಟ್ರಾಫಿಕ್) ಕಾಯ್ದೆಗಳ ಕುರಿತು ಶಾಲಾ ಮಕ್ಕಳಿಗೆ ಹಾಗೂ ಅವರ ಪಾಲಕರಿಗೆ ಅರಿವು ಸಭೆಯನ್ನು ಹಮ್ಮಿಕೊಳ್ಳುವುದು. ವಾಹನ ಚಾಲಕರು ಮತ್ತು ನಿರ್ವಾಹಕರು ಶಾಲಾ ಮಕ್ಕಳನ್ನು ಸುರಕ್ಷತೆಯಿಂದ ಮನೆಗೆ ತಲುಪಿಸುವ ಕುರಿತು ಸಭೆಯನ್ನು ಆಯೋಜಿಸುವುದು. ಪ್ರತಿ ತಿಂಗಳಿಗೊಮ್ಮೆ ಎಸ್.ಡಿ.ಎಮ್.ಸಿ (SDMC) ಸಭೆಯನ್ನು ಹಮ್ಮಿಕೊಳ್ಳುವುದು.
ಸದರಿ ಸಭೆಯಲ್ಲಿ ಪಾಲಕರಿಗೆ ಶಿಕ್ಷಣದ ಕುರಿತು ಅರಿವು ಮೂಡಿಸಿ ಯಾವುದೇ ಮಗು ಶಾಲೆಯಿಂದ ಹೊರಗುಳಿಯದಂತೆ ಕ್ರಮ ವಹಿಸುವುದು. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅನುದಾನಿತ ಹಾಗೂ ಅನುದಾನ ರಹಿತ ಆಡಳಿತ ಮಂಡಳಿಯವರು ಸರ್ಕಾರ ನಿಗದಿಪಡಿಸಿದ ಶುಲ್ಕಕ್ಕಿಂತಲೂ ಹೆಚ್ಚುವರಿ ಶುಲ್ಕವನ್ನು ಪಡೆಯುತ್ತಿರುವುದು ಆಯೋಗದ ಗಮನಕ್ಕೆ ಬಂದಿರುತ್ತದೆ. ಆದ್ದರಿಂದ ಸದರಿ ವಿಷಯದ ಕುರಿತು ಉಪನಿರ್ದೇಶಕರು ಗಮನವಹಿಸಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ಹೆಚ್ಚಿನ ಶುಲ್ಕ ತೆಗೆದುಕೊಳ್ಳದಂತೆ ಕ್ರಮವಹಿಸಬೇಕು," ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೂರ್ವ ಪ್ರಾಥಮಿಕ ಶಾಲೆಗಳು, ಮಕ್ಕಳ ಆರೈಕೆ ಕೇಂದ್ರಗಳು, ಅರೆಕಾಲಿಕ ತರಬೇತಿ ಕೇಂದ್ರಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಭೇಟಿ ನೀಡಿ ನೋಂದಣಿಯಾಗಿರುವ ಬಗ್ಗೆ ಖಚಿತಪಡಿಸಿಕೊಳ್ಳುವುದು ಹಾಗೂ ಮಕ್ಕಳ ಸುರಕ್ಷತೆಯ ಬಗ್ಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲು ತಿಳಿಸಿದರು.
ಸರ್ಕಾರಿ ಶಾಲೆಗಳಲ್ಲಿ ಶೌಚಾಲಯಗಳನ್ನು ಸ್ವಚ್ಛಗೊಳಿಸುವುದು ಹಾಗೂ ಶೌಚಾಲಯಗಳು ಇಲ್ಲದ ಶಾಲೆಗಳಲ್ಲಿ ಶೌಚಾಲಯ ನಿರ್ಮಿಸುವುದು. ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಕುರಿತು ವಾರಕ್ಕೊಮ್ಮೆ ತರಬೇತಿ ನಡೆಸಲು ತಿಳಿಸಿದರು.
PublicNext
05/08/2026 09:56 pm